ತುಮಕೂರು: ರಾಜ್ಯದಲ್ಲಿ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ಹೋರಾಟದ ಫಲವಾಗಿ ಬಡ್ತಿ ಮೀಸಲಾತಿ ಜಾರಿಯಲ್ಲಿದೆ. ಹಾಗೆಯೇ ಸಂವಿಧಾನದ ಅಡಿಯಲ್ಲಿ ಅವಕಾಶಗಳನ್ನು ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಎಸ್ಸಿ, ಎಸ್ಟಿ ನೌಕರರು ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಗ್ಗೂಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ 2026ರ ಆಗಸ್ಟ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶದಲ್ಲಿ ಎಲ್ಲಾ ನೌಕರರು ಪಾಲ್ಗೊಳ್ಳುವಂತೆ ಸಮಿತಿ ಅಧ್ಯಕ್ಷ ಡಿ. ಶಿವಶಂಕರ್ ಮನವಿ ಮಾಡಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ವತಿಯಿಂದ ಹಮ್ಮಿಕೊಂಡಿರುವ 6ನೇ ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಇಡೀ ದೇಶದಲ್ಲಿ ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ನಡೆಸಿದ ಹೋರಾಟ ಐತಿಹಾಸಿಕ. ಅದರ ಫಲವಾಗಿ ಇಡೀ ದೇಶದಲ್ಲಿ ಎಲ್ಲಿಯೂ ಇಲ್ಲದ ಬಡ್ತಿ ಮೀಸಲಾತಿ ಕರ್ನಾಟಕದಲ್ಲಿದೆ. ಇದು ಸಮನ್ವಯ ಸಮಿತಿಯ ಮೈಲಿಗಲ್ಲು ಎಂದರು.
ಸಂವಿಧಾನ ಬಂದು 78 ವರ್ಷ ಕಳೆದರೂ ಇಂದಿಗೂ ಈ ವರ್ಗದ ನೌಕರರು ಒಳ್ಳೆಯ ಬಟ್ಟೆ ತೊಟ್ಟರೆ, ಕಾರಿನಲ್ಲಿ ಓಡಾಡಿದರೆ ಸಹಿಸಲಾರದ ಮನಸ್ಸುಗಳಿವೆ. ಅವುಗಳನ್ನು ಮೆಟ್ಟಿ ನಿಲ್ಲುವ ಸಲುವಾಗಿ ನಾವು ಮತ್ತಷ್ಟು ಒಗ್ಗೂಡುವ ಅಗತ್ಯವಿದೆ. ನಮ್ಮ ಗೋರಿಯ ಮೇಲೆ ಬೇರೆಯವರು ಬಂದು ಮನೆ ಕಟ್ಟುವ ಮೊದಲು, ನಮ್ಮ ಗೋರಿಯ ಮೇಲೆ ನಾವೇ ಮನೆಕಟ್ಟುವಂತಹ ಸ್ವಾಭಿಮಾನವನ್ನು ನಾವು ಬೆಳೆಸಿಕೊಳ್ಳಬೇಕಾಗಿದೆ.
— ಡಿ. ಶಿವಶಂಕರ್, ಸಮಿತಿ ಅಧ್ಯಕ್ಷ
ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ್ ಎಸ್., ಮಾತನಾಡಿ, ಆಗಸ್ಟ್ 28ರಂದು ನಡೆಯುವ ಸಮಾವೇಶವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದು, ಕಂದಾಯ ಮಂತ್ರಿ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಸಂಪುಟದ ಎಲ್ಲಾ ಸಚಿವರು, ಶಾಸಕರುಗಳು ಭಾಗವಹಿಸಲಿದ್ದಾರೆ.
ಸಮಾವೇಶದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಸಹ ಹೊರ ತರಲಾಗುತ್ತಿದೆ. ಎಲ್ಲಾ ಪರಿಶಿಷ್ಟ ಜಾತಿ ಮತ್ತು ವರ್ಗಗಳ ನೌಕರರು ಐಕ್ಯತಾ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯ ಕೋಶಾಧ್ಯಕ್ಷರಾದ ಸತ್ಯನಾರಾಯಣ ಎಂ.ಎಲ್, ಉಪಾಧ್ಯಕ್ಷರಾದ ಆರ್. ಮೋಹನ್, ಕೆಂಪಸಿದ್ಧಯ್ಯ, ತುಮಕೂರು ಜಿಲ್ಲಾಧ್ಯಕ್ಷರಾದ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ನಾಗರಾಜು, ಉಪಾಧ್ಯಕ್ಷ ಹನುಮಂತರಾಜು, ಕೋಟಿ ಕಲ್ಲಯ್ಯ, ಮಂಜುನಾಥ್ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
