ಕಲಬುರಗಿ: ಪತಿ–ಪತ್ನಿ ನಡುವಿನ ಜಗಳ ವಿಕೋಪಕ್ಕೆ ತಿರುಗಿ, ಪತಿಯನ್ನೇ ಪತ್ನಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಸೇಡಂ ತಾಲೂಕಿನ ಯಡ್ಡಳ್ಳಿ ಗ್ರಾಮದ ನಿವಾಸಿ ನಾಗೇಂದ್ರ ಮುಧೋಳ (35) ಎಂದು ಗುರುತಿಸಲಾಗಿದೆ. ಹತ್ಯೆ ಆರೋಪದ ಮೇಲೆ ಆತನ ಪತ್ನಿ ಸುಧಾರಾಣಿ ಮುಧೋಳ (30) ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಾಗೇಂದ್ರ ತನ್ನ ಕುಟುಂಬದೊಂದಿಗೆ ಪತ್ನಿಯ ತವರೂರಾದ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮಕ್ಕೆ ಆಗಮಿಸಿ ಕುರಿ ಮೇಯಿಸುವ ಕೆಲಸ ಮಾಡುತ್ತಿದ್ದ. ಮದ್ಯಪಾನದ ಚಟಕ್ಕೆ ಬಿದ್ದಿದ್ದ ಈತ ಪ್ರತಿದಿನ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿಂದೆ ಕೂಡ ಜಗಳದ ಹಿನ್ನೆಲೆಯಲ್ಲಿ ಹಲವು ಬಾರಿ ಜೈಲಿಗೂ ಹೋಗಿ ಬಂದಿದ್ದ.
ಭಾನುವಾರ ರಾತ್ರಿ ಮತ್ತೆ ಪತಿ-ಪತ್ನಿ ನಡುವೆ ತೀವ್ರ ಜಗಳ ನಡೆದಿದೆ. ಈ ವೇಳೆ ನಾಗೇಂದ್ರ ತನ್ನ ಆರು ಹಾಗೂ ಎಂಟು ವರ್ಷದ ಇಬ್ಬರು ಗಂಡು ಮಕ್ಕಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಆಕ್ರೋಶಗೊಂಡ ಸುಧಾರಾಣಿ, ಕೊಡಲಿಯಿಂದ ಪತಿಯ ಮೇಲೆ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ನಾಗೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹತ್ಯೆಯ ಬಳಿಕ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮುಂದೆ ಸುಧಾರಾಣಿ ಶರಣಾಗಿ, ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಡೂರು ಶ್ರೀನಿವಾಸಲು, ಡಿವೈಎಸ್ಪಿ ಸಂಗಮೇಶ್ ಹಿರೇಮಠ ಹಾಗೂ ಕ್ರೈಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ತಾಯಿ ಸಿದ್ದಮ್ಮ ನೀಡಿದ ದೂರಿನ ಮೇರೆಗೆ ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
