ಚಿಕ್ಕನಾಯಕನಹಳ್ಳಿ: ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ಪರಿಷ್ಕರಣೆ ಕಾರ್ಯವು ತಾಲೂಕಿನಲ್ಲಿ ಶೇ.93ರಷ್ಟು ಮುಕ್ತಾಯಗೊಂಡಿದೆ ಎಂದು ಬೆಸ್ಕಾಂ ಎ.ಇ.ಇ. ಗವಿರಂಗಯ್ಯ ತಿಳಿಸಿದ್ದಾರೆ. ಅವರು ತಾಲೂಕು ಪಂಚಾಯಿತಿ ಆವರಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಪರಿಷ್ಕರಣೆ ವೇಳೆ ಹಲವು ಕುಟುಂಬದವರು ಮನೆಯಲ್ಲಿ ಇಲ್ಲದಿರುವುದು ಅಥವಾ ಇತರ ಕಾರಣಾಂತರಗಳಿಂದ 5630 ಅರ್ಜಿಗಳ ಪರಿಷ್ಕರಣೆ ಬಾಕಿ ಉಳಿದಿದೆ. ಈ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ನೂರಕ್ಕೆ ನೂರರಷ್ಟು ಗುರಿ ಸಾಧಿಸಲಾಗುವುದು. ಪರಿಷ್ಕರಣೆಯಾಗದೆ ಉಳಿದಿರುವವರು ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಪಾಂಡುರಂಗಯ್ಯ ಮಾತನಾಡಿ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ನಕಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ವಂಚಿಸುತ್ತಿರುವ ಜಾಲ ಸಕ್ರಿಯವಾಗಿದೆ. ಇತ್ತೀಚೆಗೆ ಹುಳಿಯಾರಿನಲ್ಲಿ ಗ್ರಾಮೀಣ ಜನರಿಗೆ ವಂಚಿಸುತ್ತಿದ್ದವರನ್ನು ಪತ್ತೆ ಹಚ್ಚಿ ತಹಸೀಲ್ದಾರ್ ಮಮತಾ ಅವರು ಪೊಲೀಸರಿಗೆ ಒಪ್ಪಿಸಿ ಪ್ರಕರಣ ದಾಖಲಿಸಿದ್ದಾರೆ. ಇಂತಹ ವಂಚನೆ ಪ್ರಕರಣಗಳು ತಾಲೂಕಿನಲ್ಲಿ ಹೆಚ್ಚಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿ.ಡಿ.ಪಿ.ಓ. ಹೊನ್ನಪ್ಪ, ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆಯರು ಎಸ್ಬಿಆರ್ ಪರಿಷ್ಕರಣೆಯಲ್ಲಿ ತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ವಂಚನೆ ಪ್ರಕರಣಗಳು ಮರುಕಳಿಸದಂತೆ ಅಂಗನವಾಡಿ ಕಾರ್ಯಕರ್ತೆಯರ ಸಭೆ ಕರೆದು, ಅವರ ಮೂಲಕ ಗ್ರಾಮಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಗುವುದು ಎಂದು ಭರವಸೆ ನೀಡಿದರು.
ಈ ಕುರಿತು ಪ್ರತಿಕ್ರಿಯಿಸಿದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಶಿವ ರಾಜಯ್ಯ, ಇಂತಹ ಪ್ರಕರಣಗಳು ಮರುಕಳಿಸದಂತೆ ನಿಗಾ ವಹಿಸಲಾಗುವುದು. ಅಲ್ಲದೆ ವಾಟರ್ ಮ್ಯಾನ್ಗಳು ಸಾರ್ವಜನಿಕರ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ, ನೇರವಾಗಿ ನನ್ನ ಗಮನಕ್ಕೆ ತನ್ನಿ, ತಕ್ಷಣವೇ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.
ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಭೆಗೂ ಮುನ್ನ ಬೆಸ್ಕಾಂ ಕಚೇರಿ ಆವರಣದಲ್ಲಿ ಸಾಂಕೇತಿಕವಾಗಿ ಮೂರು ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.
ಸಭೆಯಲ್ಲಿ ಪ್ರಮುಖರಾದ ನಟರಾಜು, ಓಂಕಾರ್ ಮೂರ್ತಿ, ಚಿಕ್ಕತಿಮ್ಮಯ್ಯ, ತಾಲೂಕು ಪಂಚಾಯಿತಿ ವ್ಯವಸ್ಥಾಪಕ ಬಸವರಾಜು ಸೇರಿದಂತೆ ಗ್ಯಾರಂಟಿ ಯೋಜನಾ ಸಮಿತಿಯ ಹಲವು ಸದಸ್ಯರು ಉಪಸ್ಥಿತರಿದ್ದರು.
ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಕೇವಲ ಗೃಹಲಕ್ಷ್ಮಿ ಯೋಜನೆಯೊಂದರಿಂದಲೇ ತಾಲೂಕಿಗೆ 300 ಕೋಟಿಗೂ ಅಧಿಕ ಹಣ ಬಂದಿದೆ. ಒಟ್ಟಾರೆಯಾಗಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ತಾಲೂಕಿಗೆ ಬರೋಬ್ಬರಿ 700 ಕೋಟಿ ರೂ. ಅನುದಾನ ಹರಿದುಬಂದಿದೆ. ಇದು ಜನಸಾಮಾನ್ಯರ ಜೀವನಮಟ್ಟವನ್ನು ಗಣನೀಯವಾಗಿ ಸುಧಾರಿಸಿದೆ.
— ಕೆ.ಎಸ್.ಕಿರಣ್ ಕುಮಾರ್, ಮಾಜಿ ಶಾಸಕರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
