ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(SIR)–2026ರಡಿ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲಾ ERO, AERO ಹಾಗೂ Additional–AEROಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕರಡು ಮತದಾರರ ಪಟ್ಟಿಯನ್ನು ನಿಗದಿತ ದಿನಾಂಕದಂದು ಪ್ರಕಟಿಸಲು ಅಗತ್ಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದರು.
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಪ್ರತಿದಿನ ನೋಟಿಸ್ ಜಾರಿಗೊಳಿಸಿ, ಅಗತ್ಯವಿರುವಲ್ಲಿ ವಿಚಾರಣೆ ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕು. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ, ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸುವುದರೊಂದಿಗೆ ನಿಗದಿತ ದಾಖಲೆಗಳ ಘೋಷಣೆ ಸೇರಿದಂತೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಕಾರ್ಯದಲ್ಲಿ ಯಾವುದೇ ವಿಳಂಬವಾಗದಂತೆ ಎಲ್ಲಾ ಹಂತಗಳನ್ನು ವ್ಯವಸ್ಥಿತವಾಗಿ ಮುಗಿಸುವಂತೆ ಸೂಚಿಸಿದರು.
ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್ಸೈಟ್ಗಳಲ್ಲಿ ಅಪ್ಲೋಡ್ ಮಾಡುವುದರ ಜೊತೆಗೆ, ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಚಟುವಟಿಕೆಗಳ ಬಗ್ಗೆಯೂ ಸೂಕ್ತ ಗಮನಹರಿಸಬೇಕು. ಹೊಸದಾಗಿ ನೇಮಕಗೊಂಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ SIR ಪ್ರಕ್ರಿಯೆ ಹಾಗೂ ಮೊಬೈಲ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ, ಆ್ಯಪ್ ಅನ್ನು ಸರಿಯಾಗಿ ಬಳಸುವಂತೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಆದ್ಯತೆಯ ಕರ್ತವ್ಯವಾಗಿದ್ದು ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಿರ್ವಹಿಸಬೇಕು. ಹೊಸದಾಗಿ ನಿಯೋಜನೆಗೊಂಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಎಸ್ಐಆರ್ ಕಾರ್ಯ ಕುರಿತು ಸ್ಪಷ್ಟವಾಗಿ ತಿಳಿಸಬೇಕು. ಹೊಸ ಬೂತ್ಗಳ ಜವಾಬ್ದಾರಿ ಹೊಂದಿರುವ EROಗಳು ಹೆಚ್ಚಿನ ಗಮನಹರಿಸಿ, ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಂಜೀವಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಮಾನ್ಯತೆ ಪಡೆದ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
