ಸರಗೂರು: ಮೈಸೂರಿಗೆ ಆಗಮಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರನ್ನು ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಸೋಮವಾರ ಭೇಟಿ ಮಾಡಿದರು. ಸರಗೂರು ಹಾಗೂ ಹೆಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ಶಿಫಾರಸು ಮಾಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ, ಶಾಸಕ ಅನಿಲ್ ಚಿಕ್ಕಮಾದು ಅವರು ಹಿಂದುಳಿದ ತಾಲೂಕುಗಳಾದ ಸರಗೂರು ಹಾಗೂ ಹೆಚ್.ಡಿ.ಕೋಟೆ ಭಾಗಗಳಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಗೆಲುವು ಸಾಧಿಸಿರುವ ಅವರಿಗೆ ಸಚಿವ ಸ್ಥಾನ ನೀಡಿದರೆ ಈ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಹೇಳಿದರು. ಅಲ್ಲದೆ, ಅನಿಲ್ ಚಿಕ್ಕಮಾದು ಅವರು ಹಿಂದುಳಿದ ಪ್ರದೇಶದ ಯುವಕರಿಗೆ, ರೈತರಿಗೆ ಹಾಗೂ ಸಾಮಾನ್ಯ ಜನರಿಗೆ ಸ್ಪಂದಿಸುವ ಜನಪ್ರತಿನಿಧಿಯಾಗಿದ್ದು, ಅವರಿಗೆ ಸಚಿವ ಸ್ಥಾನ ದೊರೆತರೆ ಮೈಸೂರು ಜಿಲ್ಲೆಯ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಸಿಗಲಿದೆ ಎಂದು ಒತ್ತಾಯಿಸಿದರು.
ಇದೇ ವೇಳೆ ಸರಗೂರು ಪಟ್ಟಣದ ವಿವೇಕಾನಂದ ಆಸ್ಪತ್ರೆ ಪಕ್ಕದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡುವಂತೆ ಸಚಿವರಿಗೆ ಮನವಿ ಮಾಡಲಾಗಿದ್ದು, ಸಮಾಜದ ಏಳಿಗೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ವತಿಯಿಂದ ಅಗತ್ಯ ಸಹಕಾರ ನೀಡುವಂತೆ ಮುಖಂಡರು ಕೋರಿದರು.
ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದರು. ಜೊತೆಗೆ, ಸಮಾಜದ ಮುಖಂಡರು ಸಲ್ಲಿಸಿರುವ ಮನವಿಗಳನ್ನು ಪರಿಶೀಲಿಸಿ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ವರುಣ ಮಹೇಶ್, ಮಹಾಸಭಾ ಸಹ ಕಾರ್ಯದರ್ಶಿ ಬಸವರಾಜು, ಮುಖಂಡರಾದ ನಂದೀಶ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
