ಹಳ್ಳಿಮೈಸೂರು (ಹೊಳೆನರಸೀಪುರ): ಸಾರ್ವಜನಿಕರ ಹಾಗೂ ರೈತರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರು ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಗ್ರಾಮ ಪಂಚಾಯತಿ ಆವರಣದಲ್ಲಿ ಇಂದು ಬೃಹತ್ ಜನಸಂಪರ್ಕ ಹಾಗೂ ಕುಂದುಕೊರತೆ ಆಲಿಕೆ ಸಭೆ ನಡೆಸಿದರು.
ಗ್ರಾಮಕ್ಕೆ ಆಗಮಿಸಿದ ಯುವ ಸಂಸದ ಶ್ರೇಯಸ್ ಎಂ. ಪಟೇಲ್ ಅವರನ್ನು ಸ್ಥಳೀಯ ಮುಖಂಡರು, ರೈತರು ಹಾಗೂ ಸಾರ್ವಜನಿಕರು ಪಟಾಕಿ ಸಿಡಿಸಿ, ಹೂಮಳೆ ಸುರಿಸಿ ಅತ್ಯಂತ ಅದ್ಧೂರಿಯಾಗಿ ಬರಮಾಡಿಕೊಂಡರು.
ಅಹವಾಲುಗಳ ಮಹಾಪೂರ ಗ್ರಾಮ ಪಂಚಾಯತಿ ಆವರಣದಲ್ಲಿ ಆಯೋಜಿಸಲಾಗಿದ್ದ ಈ ಸಭೆಗೆ ಹಳ್ಳಿಮೈಸೂರು ಹೋಬಳಿಯ ಸುತ್ತಮುತ್ತಲಿನ ನೂರಾರು ಗ್ರಾಮಗಳಿಂದ ಆಗಮಿಸಿದ್ದ.
ಸಾರ್ವಜನಿಕರು ಹಾಗೂ ರೈತರು ತಮ್ಮ ಕುಂದುಕೊರತೆಗಳ ಬಗ್ಗೆ ನೂರಾರು ಅರ್ಜಿಗಳನ್ನು ಸಂಸದರಿಗೆ ಸಲ್ಲಿಸಿದರು. ಕುಡಿಯುವ ನೀರು, ರಸ್ತೆ ಸಂಪರ್ಕ, ಕೃಷಿ ಸಂಬಂಧಿತ ಸೌಲಭ್ಯಗಳು, ಪಿಂಚಣಿ, ವಸತಿ ಯೋಜನೆ ಹಾಗೂ ಮೂಲಸೌಕರ್ಯಗಳಿಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಂದರು. ಪ್ರತಿಯೊಂದು ಅರ್ಜಿಯನ್ನು ಪರಿಶೀಲಿಸಿದ ಸಂಸದರು, ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದರು.ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಇಲಾಖೆಗಳ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಸಂಸದರು, “ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ಕೇವಲ ಕಾಗದದ ಮೇಲೆ ಇರಿಸದೇ, ಕಾಲಮಿತಿಯೊಳಗೆ ಸೂಕ್ತ ಪರಿಹಾರ ಒದಗಿಸಬೇಕು. ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸುವುದನ್ನು ಸಹಿಸುವುದಿಲ್ಲ” ಎಂದು ಖಡಕ್ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ರೇಣುಕುಮಾರ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಶ್, ತಾಲ್ಲೂಕು ಆರೋಗ್ಯಾಧಿಕಾರಿ ರಾಜೇಶ್ ಸೇರಿದಂತೆ ಕಂದಾಯ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಮೆಸ್ಕಾಂ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಮತ್ತು ಸ್ಥಳೀಯ ಮುಖಂಡರು ಹಾಜರಿದ್ದರು.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
