ಕೊರಟಗೆರೆ: ಗಣೇಶ ಚತುರ್ಥಿ ಹಬ್ಬದ ಸಂಭ್ರಮಕ್ಕೆ ಸಿದ್ಧತೆ ನಡೆಸುತ್ತಿದ್ದ ಕುಟುಂಬವೊಂದರಲ್ಲಿ ದುರಂತ ಸಂಭವಿಸಿದ್ದು, ಗಣೇಶನ ಪ್ರತಿಷ್ಠಾಪನೆಗಾಗಿ ಪೆಂಡಲ್ ಹಾಕುವ ಸಂದರ್ಭದಲ್ಲಿ ಚಪ್ಪರದಿಂದ ಬಿದ್ದು 65 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಬುರುಗನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಬುರುಗನಹಳ್ಳಿ ಗ್ರಾಮದ ಗೋವಿಂದರಾಜು (65) ಮೃತರು. ಗಣೇಶನ ಪ್ರತಿಷ್ಠಾಪನೆಗಾಗಿ ಪೆಂಡಲ್ ಹಾಕುವ ಕೆಲಸದಲ್ಲಿ ತೊಡಗಿದ್ದ ಅವರು ಚಪ್ಪರದ ಮೇಲಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಚರಂಡಿಯಲ್ಲಿದ್ದ ಕಲ್ಲಿಗೆ ತಲೆ ಬಲವಾಗಿ ಅಪ್ಪಳಿಸಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಗಣೇಶ ಚತುರ್ಥಿಯ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ ನಡೆದ ಈ ಅನಿರೀಕ್ಷಿತ ದುರಂತದಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಇದೀಗ ದುಃಖ ಮಡುಗಟ್ಟಿದ್ದು, ಗೋವಿಂದರಾಜು ಅವರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಬ್ಬದ ಸಡಗರದಲ್ಲಿದ್ದ ಬುರುಗನಹಳ್ಳಿ ಗ್ರಾಮದಲ್ಲೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ಪುರುಷೋತ್ತಮ್ ಹಾಗೂ ಪಿಎಸ್ಐ ತೀರ್ಥೇಶ್ ಅವರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
