ಪಾವಗಡ: ತಾಲ್ಲೂಕಿನಲ್ಲಿ ಮಳೆಯ ಕೊರತೆಯಿಂದಾಗಿ ಬರದ ಪರಿಸ್ಥಿತಿ ತೀವ್ರಗೊಂಡಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ಹಾಗೂ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಕುರಿಮಲ್ಲಪ್ಪ ಒತ್ತಾಯಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಕಳೆದ 25 ವರ್ಷಗಳಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆಯಿಲ್ಲದೆ ಕಡಲೆಕಾಯಿ, ತೊಗರಿ, ರಾಗಿ ಮತ್ತು ಟೊಮ್ಯಾಟೊ ಸೇರಿದಂತೆ ಪ್ರಮುಖ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಕೂಡಲೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಭದ್ರಾ ಮೇಲ್ದಂಡೆ, ಹೇಮಾವತಿ ಹಾಗೂ ಎತ್ತಿನಹೊಳೆ ಯೋಜನೆಗಳ ನೀರನ್ನು ಪಾವಗಡಕ್ಕೆ ಹರಿಸುವ ಕಾಮಗಾರಿಗಳಿಗೆ ವೇಗ ನೀಡಬೇಕು ಮತ್ತು ಸೋಲಾರ್ ಕಂಪನಿಗಳು ಒತ್ತುವರಿ ಮಾಡಿಕೊಂಡಿರುವ ರೈತರ ಜಮೀನುಗಳ ದಾರಿ ಸಮಸ್ಯೆಯನ್ನು ತಕ್ಷಣ ಬಗೆಹರಿಸಬೇಕು ಎಂದು ಅವರು ತಿಳಿಸಿದರು.
ಈ ಕುರಿತು ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಪೂಜಾರಪ್ಪ, ಅಕ್ರಮ–ಸಕ್ರಮ ಜಮೀನುಗಳಿಗೆ ಸಂಬಂಧಿಸಿದಂತೆ ಫಾರಂ ನಂ. 50, 53 ಹಾಗೂ 57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕು ಎಂದರು. ಅಲ್ಲದೆ, ಸರ್ಕಾರ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು, ಎಲ್ಲಾ ವರ್ಗದ ಮಾಸಿಕ ಪಿಂಚಣಿಯನ್ನು ₹2,500ಕ್ಕೆ ಹೆಚ್ಚಿಸಬೇಕು ಹಾಗೂ ಮಾಜಿ ಸೈನಿಕರಿಗೆ ತಲಾ ಐದು ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಈ ಬೇಡಿಕೆಗಳನ್ನು ಈಡೇರಿಸುವಲ್ಲಿ ನಿರ್ಲಕ್ಷ್ಯ ವಹಿಸಿದರೆ, ರೈತರನ್ನು ಸಂಘಟಿಸಿ ಬೃಹತ್ ಪ್ರತಿಭಟನೆ ನಡೆಸಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ರಾಮಾಂಜಿ, ತಾಲ್ಲೂಕು ಅಧ್ಯಕ್ಷ ಶಿವು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
