ಧಾರವಾಡ: ಎಲ್ಲವೂ ಅಂದುಕೊಂಡಂತೆ ನಡೆದರೆ ಹಲವು ದಶಕಗಳ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆ ಧಾರವಾಡಕ್ಕೆ ಬರುವ ದಿನಗಳು ದೂರವಿಲ್ಲ. ಧಾರವಾಡ ನಗರಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಒಪ್ಪಿಗೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕೊ ಅಥವಾ ಬೇಡವೆ ಎಂಬುದನ್ನು ಪರಿಶೀಲಿಸುವುದಾಗಿ ಹೇಳಿದರು. ನಂತರ ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಯನ್ನಾಗಿ ಮಾಡಲು ಕ್ರಮಕೈಗೊಳ್ಳಲಿದ್ದೇವೆ ಎಂದರು.
ನಗರ ಸ್ಥಳೀಯ ಸಂಸ್ಥೆಯನ್ನು ನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು 2011ರ ಜನಸಂಖ್ಯೆ ಮಾನದಂಡವಾಗಿದೆ. ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ 1976ರಲ್ಲಿರುವ ಮಾನದಂಡಗಳನ್ನು ಧಾರವಾಡ ಪೂರೈಸುತ್ತದೆಯೇ ಎಂಬುದನ್ನು ಪರಿಶೀಲಿಸುವುದಾಗಿ ಹೇಳಿದರು.
ಹುಬ್ಬಳ್ಳಿ ಮತ್ತು ಧಾರವಾಡ ಅವಳಿ ನಗರಗಳಾಗಿದ್ದು, 202.3 ಚ.ಕಿ.ಮೀ.ಗಳಷ್ಟು ವಿಸ್ತಾರವಾಗಿದ್ದು, 2011ರ ಜನಗಣತಿಯ ಪ್ರಕಾರ 9.43 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಜನಸಾಂದ್ರತೆ ಪ್ರತಿ ಚದರ ಕಿ.ಮೀ.ಗೆ 4,665 ಇದೆ. ಅವಳಿ ನಗರಗಳ ಆಡಳಿತಕ್ಕಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ರಚಿಸಲಾಗಿದೆ.
ಕೆಎಂಸಿ ಕಾಯಿದೆಯ ಪ್ರಕಾರ ನಗರವೊಂದಕ್ಕೆ ಸಿಟಿ ಕಾರ್ಪೊರೇಷನ್ ಹೊಂದಲು ಮೂರು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರಬೇಕು. ಜನಸಾಂದ್ರತೆ ಪ್ರತಿ ಚ.ಕಿ.ಮೀ.ಗೆ 3,000ಕ್ಕಿಂತ ಕಡಿಮೆ ಇರಬಾರದು. ನಗರದಿಂದ 6 ಕೋಟಿಗೂ ಹೆಚ್ಚು ಆದಾಯ ಬರಬೇಕು. ವಾರ್ಷಿಕವಾಗಿ ಸ್ವಂತ ಸಂಪನ್ಮೂಲಗಳನ್ನು ಹೊಂದಿರಬೇಕು ಮತ್ತು ನಗರದ ಜನಸಂಖ್ಯೆಯ ಶೇಕಡಾ 50 ಕ್ಕಿಂತ ಹೆಚ್ಚು ಜನರು ಕೃಷಿಯೇತರ ವಲಯಗಳಲ್ಲಿ ಉದ್ಯೋಗಿಗಳಾಗಿರಬೇಕು ಎಂದು ಸುರೇಶ್ ಹೇಳಿದರು.


