ತುಮಕೂರು: ಜಿಲ್ಲೆಯ ಆಮ್ ಆದ್ಮಿ ಪಾರ್ಟಿಯ ಯಾವೊಬ್ಬ ಪದಾಧಿಕಾರಿಯೂ ಬಿಜೆಪಿ ಸೇರ್ಪಡೆಯಾಗಿಲ್ಲ ಎಂದು ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರ ಮಟ್ಟದಲ್ಲಿ ಆಗಿರುವ ಇಂಡಿಯಾ ಮಹಾ ಘಟ್ ಬಂಧನ್ ಮೈತ್ರಿ ಕೂಟದಲ್ಲಿ ಆಮ್ ಆದ್ಮಿ ಪಾರ್ಟಿ ಕೂಡ ಪ್ರಮುಖ ಪಕ್ಷವಾಗಿದ್ದು, ಈ ಮೈತ್ರಿ ಧರ್ಮದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಆದರೆ ಸೋಲಿನ ಭೀತಿಯಲ್ಲಿರುವ ಜಿಲ್ಲಾ ಬಿಜೆಪಿ ಕಳೆದ ಹತ್ತು ವರ್ಷಗಳ ಹಿಂದೆ ನಮ್ಮ ಪಕ್ಷದಲ್ಲಿದ್ದು, ನಂತರ ನಾಪತ್ತೆಯಾಗಿದ್ದ ಮುನಿಯಪ್ಪ ಎಂಬುವರನ್ನು ಹುಡುಕಿ ಜಿಲ್ಲಾ ಎಎಪಿ ಖಜಾಂಚಿ ಬಿಜೆಪಿ ಸೇರ್ಪಡೆ ಆಗಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದೆ. ಇದು ಸತ್ಯಕ್ಕೆ ದೂರ. ಅಸಲಿ ವಿಷಯವೆಂದರೆ ನಮ್ಮ ಜಿಲ್ಲಾ ಎಎಪಿಯಲ್ಲಿ ಈವರೆಗೆ ಖಜಾಂಚಿ ಹುದ್ದೆಯೇ ಇಲ್ಲ ಎಂದು ಎ ಎ ಪಿ ಮುಖಂಡರು ತಿರುಗೇಟು ನೀಡಿದ್ದಾರೆ.
ನಮ್ಮ ಆಮ್ ಆದ್ಮಿ ಪಾರ್ಟಿಯ ಅತ್ಯುನ್ನತ ನಾಯಕರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಟ್ಟು ಲೋಕಸಭಾ ಚುನಾವಣೆ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನೇ ಅನುಸರಿಸಿ ಜಿಲ್ಲಾ ಬಿಜೆಪಿ ನಮ್ಮ ಪಕ್ಷದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಕಿಡಿಗೇಡಿತನದ ಪರಮಾವಧಿ ಎಂದು ಖಂಡಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಾದ ತುಮಕೂರು ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ, ಚಿತ್ರದುರ್ಗದ ಬಿ.ಎನ್.ಚಂದ್ರಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿ.ಕೆ.ಸುರೇಶ್ ಗೆಲುವಿಗೆ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಯಾ ಕ್ಷೇತ್ರವಾರು ‘ಮಾಡು ಇಲ್ಲವೇ ಮಡಿ’ ಎಂಬಂತೆ ದುಡಿಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ಚುನಾವಣೆ ಪ್ರಚಾರಕ್ಕೆ ಹೋದಡೆಯೆಲ್ಲಾ ನಮ್ಮ ನಾಯಕರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಬಾರಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಅಧ್ಯಕ್ಷ ಎಚ್.ಎ.ಜಯರಾಮಯ್ಯ ಹಾಗೂ ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296