ಕೊರಟಗೆರೆ: ಕ್ಯಾಂಟರ್ ಹಾಗೂ ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರ ಸಹಿತ ಮೂವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಶಾಪುರ ಗೇಟ್ ಸಮೀಪದ ಮುಖ್ಯರಸ್ತೆಯಲ್ಲಿ ನಡೆದಿದೆ.
ಕೊರಟಗೆರೆಯಿಂದ ಗೌರಿಬಿದನೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಭೀಕರ ಅಪಘಾತ ನಡೆದಿದೆ. ಅರಸಾಪುರ ಮತ್ತು ಕಾಶಾಪುರ ಗೇಟ್ ಬಳಿ ಈಗಾಗಲೇ ಅಪಘಾತ ವಲಯ ಎಂದು ಗುರುತಿಸಲಾಗಿದೆ. ಇದೇ ಪ್ರದೇಶದಲ್ಲಿ ಇದೀಗ ಅಪಘಾತ ಸಂಭವಿಸಿದ್ದು, ಮೂರು ಜೀವಗಳು ಬಲಿಯಾಗಿದೆ.
ಕೊರಟಗೆರೆ ಪಟ್ಟಣದ ನಿವಾಸಿಯಾದ ಮೀಲಾನಿ(25), ಜೈರಾಭಿ(70), ಆಟೋ ಚಾಲಕ ಕಲಂದರ್(36) ಮೃತಪಟ್ಟವರಾಗಿದ್ದು, ಆಟೋ ಚಾಲಕ ಕಲಂದರ್ ಅವರ ಮಕ್ಕಳಾದ ಅರ್ಪ(5), ಅಸೀತಾ(3) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಸಾರ್ವಜನಿಕರು ರಸ್ತೆ ಸುರಕ್ಷತೆಯ ನಿರ್ಲಕ್ಷ್ಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ತಿರುವಿನಲ್ಲಿ ರಸ್ತೆ ಉಬ್ಬು ನಿರ್ಮಾಣಕ್ಕೆ ಆಗ್ರಹಿಸಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz