ಬಿಜೆಪಿ ಪಕ್ಷದ ವಿರುದ್ಧ ವಿವಿಧ ಭ್ರಷ್ಟಾಚಾರ ಆರೋಪ ಹೊರಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಗೆ ಪರಿಗಣಿಸಿದೆ.
ಭಾರತೀಯ ಜನತಾ ಪಕ್ಷ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಪ್ರೀತ್ ಅವರು ದೂರು ವಿಚಾರಣೆಗೆ ಯೋಗ್ಯವೆಂದು ಪರಿಗಣಿಸಿದ್ದು, ಕಾಗ್ನಿಜೆನ್ಸ್ ಪಡೆದುಕೊಂಡಿದೆ. ಅಲ್ಲದೇ, ಪ್ರಕರಣ ಸಂಬಂಧ ದೂರುದಾರರು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುವುದಕ್ಕಾಗಿ ಜುಲೈ 27ಕ್ಕೆ ದಿನಾಂಕವನ್ನು ನಿಗದಿ ಪಡಿಸಿ ವಿಚಾರಣೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ ಏನು?:ಬಿಜೆಪಿ ಪಕ್ಷದ ವಿರುದ್ಧ ಭ್ರಷ್ಟಾಚಾರ ರೇಟ್ ಕಾರ್ಡ್ ಎಂಬ ಶೀರ್ಷಿಕೆಯಡಿ ಪ್ರಮುಖ ದಿನ ಪತ್ರಿಕೆಗಳಲ್ಲಿ 2023 ರ ಮೇ 5ರಂದು ಮಾನಹಾನಿಕರ ಜಾಹೀರಾತು ನೀಡಲಾಗಿತ್ತು. ಈ ಜಾಹೀರಾತಿನಲ್ಲಿ ಅಧಿಕಾರಿಗಳ ವರ್ಗಾವಣೆಗೆ ವಿವಿಧ ಹಂತದಲ್ಲಿ ಲಂಚವನ್ನು ಪಡೆದುಕೊಳ್ಳಲಾಗುತ್ತಿದೆ. ಎಂಜಿನಿಯರ್ಗಳಿಗೆ 5 ಕೋಟಿ, ಸಬ್ ರಿಜಿಸ್ಟಾರ್ಗೆ 5 ಕೋಟಿ, ಪಿಎಸ್ಐಗೆ 80 ಲಕ್ಷ ಎಂಬುದಾಗಿ ಪ್ರತಿಯೊಂದು ಹುದ್ದೆಯನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಜಾಹೀರಾತಿನಲ್ಲಿ ತಿಳಿಸಿದ್ದರು.
ಈ ಕುರಿತು ಬಿಜೆಪಿ ಪಕ್ಷವು ಮಾನನಷ್ಟಕ್ಕೆ ಕಾರಣವಾಗಿದೆ ಎಂದು ಆರೋಪಿಸಿ, ದೂರು ನೀಡಿದೆ.”ಅಲ್ಲದೇ, ಕೊರೋನಾ ಚಿಕಿತ್ಸೆಗೆ ಬೇಕಿರುವ ಪರಿಕರಗಳ ಖರೀದಿಗೆ ಶೇ. 70 ರಷ್ಟು ಕಮಿಷನ್ ಪಡೆಯಲಾಗಿದೆ.ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ ನೀಡುವು ವಿಚಾರ, ಟೆಂಡರ್ ಪ್ರಕ್ರಿಯೆಗಳು, ಮೊಟ್ಟೆ ವಿತರಣೆಗಳಲ್ಲಿ ಶೇ.30 ರಿಂದ 70 ರ ವರೆಗೂ ಕಮಿಷನ್ ಪಡೆಯಲಾಗಿದೆ ಎಂದು ತಿಳಿಸಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


