ಕೊರಟಗೆರೆ: ತಾಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುಡಿಸಲಿನಲ್ಲಿ ವಾಸವಾಗಿದ್ದ ಸುಮಾರು 20 ಅಲೆಮಾರಿ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದರು.
ಹುಲಿಕುಂಟೆ ಸಮೀಪ ಹಂದಿ ಜೋಗರು ವಾಸವಿರುವ ಸ್ಥಳಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂದಿ ಜೋಗರಿಗೆ ಈಗಾಗಲೇ ಸುಸಜ್ಜಿತ ರಸ್ತೆ ನಿರ್ಮಿಸಲಾಗಿದ್ದು ನಿವೇಶನಗಳನ್ನ ಅಭಿವೃದ್ಧಿಪಡಿಸಿ ಹಕ್ಕು ಪತ್ರಗಳನ್ನು ವಿತರಿಸಲು ಕ್ರಮ ವಹಿಸಲಾಗಿದೆ. ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಬೋರ್ವೆಲ್ ಕೊರೆಸಲಾಗಿದೆ ಅಲ್ಲದೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆ ನಿರ್ಮಿಸಿಕೊಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಅಲೆಮಾರಿ ನಿವಾಸಿಗಳ ಮನವಿಯನ್ನು ಆಲಿಸಿದ ಅವರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಮುರಾರ್ಜಿ ಅಥವಾ ಹಾಸ್ಟೆಲ್ ಗಳಿಗೆ ತಮ್ಮ ಮಕ್ಕಳನ್ನು ಸೇರಿಸಿ ಶಿಕ್ಷಣದ ಕಡೆ ಹೆಚ್ಚು ಒತ್ತು ನೀಡಿ, ಮಕ್ಕಳು ವಿದ್ಯಾವಂತರಾದರೆ ನಿಮ್ಮ ಜೀವನ ಮಟ್ಟ ಸುಧಾರಣೆಯಾಗುತ್ತದೆ ಎಂದ ಅವರು ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯ ಜೀವನ ನಡೆಸಿ ಎಂದು ಕಿವಿಮಾತು ಹೇಳಿದರು.
ಮೂಲಭೂತ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಿದ್ದಕ್ಕಾಗಿ ಜಿ ಪಂ ಸಿಇಒ ಡಾ.ವಿದ್ಯಾಕುಮಾರಿ ಅವರನ್ನು ಅಲೆಮಾರಿ ನಿವಾಸಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಣ್ಣ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಇ ಓ ದೊಡ್ಡಸಿದ್ದಯ್ಯ, ಜಿ.ಪಂ. ಎಇಇ ರವಿಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷ ಡಿ.ಎಲ್.ಮಲ್ಲಣ್ಣ, ಎಡಿಎ ನಾಗರಾಜು, ಮುಶೀರ್,ಜಯಸಿಂಹ,ಮತ್ತಿತರರು ಹಾಜರಿದ್ದರು.
ಪಿಡಿಓ ಗೈರು ಹಾಜರಿ: ಅಲೆಮಾರಿ ವಾಸಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರೂ ಸಹ ಹುಲಿಕುಂಟೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮೈಲಣ್ಣ ಸ್ಥಳಕ್ಕೆ ಆಗಮಿಸದೆ ಗೈರು ಹಾಜರಾಗಿದ್ದರು.
ಉನ್ನತ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸುತ್ತಾರೆ ಆದರೆ ಅಭಿವೃದ್ದಿ ಅಧಿಕಾರಿ ಇತ್ತ ತಲೆಯೂ ಹಾಕಿಲ್ಲ ನಮ್ಮ ಸಮಸ್ಯೆಯನ್ನು ಕೇಳಿಲ್ಲ ಎಂದು ಅಲೆಮಾರಿ ನಿವಾಸಿಗಳು ಈ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz