ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಗೆ ಗಣ್ಯರು ಶುಭಹಾರೈಸಿದ್ದಾರೆ.
ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ನಮನಗಳು. ಅವರು ಭಾರತದ ಪ್ರಗತಿಗೆ ಅಳಿಸಲಾಗದ ಕೊಡುಗೆಗಳನ್ನು ನೀಡಿದ್ದಾರೆ. ನಮ್ಮ ರಾಷ್ಟ್ರಕ್ಕಾಗಿ ಅವರ ಕನಸುಗಳನ್ನು ನನಸಾಗಿಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನ ಇದಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಸ್ವಾತಂತ್ರ್ಯ, ಸಮಾನತೆ ಮತ್ತು ಬ್ರಾತ್ರುತ್ವದ ಮೂಲಕ ಜಾತ್ಯಾತೀತ ಮತ್ತು ಸಮಾಜವಾದಿ ಪ್ರಜಾಪ್ರಭುತ್ವದ ದೇಶ ಕಟ್ಟಲು ಡಾ. ಬಿ.ಆರ್ ಅಂಬೇಡ್ಕರ್ ಎಳೆದು ತಂದು ನಿಲ್ಲಿಸಿದ ವಿಮೋಚನಾ ರಥವನ್ನು ಮುಂದಕ್ಕೆ ಒಯ್ಯಲು ನಾವೆಲ್ಲ ಕೈಜೋಡಿಸೋಣ. ನಾಡಿನ ಜನತೆಗೆ ಅಂಬೇಡ್ಕರ್ ಜಯಂತಿಯ ಶುಭಾಶಯಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಜಗತ್ತಿನ ಸರ್ವಶ್ರೇಷ್ಠ ಸಂವಿಧಾನದ ಶಿಲ್ಪಿ ಎಂದೇ ಖ್ಯಾತಿಪಡೆದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯಂದು ಆ ಸಾಧಕ ಚೇತನಕ್ಕೆ ಶ್ರದ್ಧಾಪೂರ್ವಕ ಪ್ರಣಾಮಗಳು. ದೇಶ ಕಟ್ಟುವ ಕಾರ್ಯದಲ್ಲಿ ಅದ್ವಿತೀಯ ಕೊಡುಗೆ ನೀಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಹಕ್ಕುಗಳನ್ನು ಮತ್ತು ಮುಂದಡಿಯಿಡುವ ಭರವಸೆಯನ್ನೂ ಕಲ್ಪಿಸಿಕೊಟ್ಟು ಅಮರರಾಗಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವ ಎಂಬ ಮೂಲಭೂತ ತತ್ತ್ವಗಳನ್ನು ಧರ್ಮವು ಗುರುತಿಸಿ, ಅವುಗಳನ್ನು ಒಳಗೊಳ್ಳಲೇಬೇಕು ಎಂದು ಬಾಬಾ ಸಾಹೇಬ್ ಪ್ರತಿಪಾದಿಸಿದ್ದರು. ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಾವು ಹೆಜ್ಜೆ ಇಡೋಣ, ಸಂವಿಧಾನ ಶಿಲ್ಪಿ, ಮಹಾನ್ ಜ್ಞಾನಿಗಳು, ಈ ಯುಗದ ಶ್ರೇಷ್ಠ ದಾರ್ಶನಿಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ದಿನದಂದು ಆ ಮಹಾನ್ ಚೇತನಕ್ಕೆ ನನ್ನ ಭಾವಪೂರ್ಣ ಪ್ರಣಾಮಗಳು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶುಭಾಶಯಗಳನ್ನು ತಿಳಿಸಿದ್ದಾರೆ.
ಭಾರತದ ಭಾಗ್ಯವಿಧಾತ,ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು. ಸಮಾನತೆಯನ್ನು ಪ್ರತಿಪಾದಿಸುವ ಜೊತೆಗೆ ಶೋಷಿತ ಸಮುದಾಯಗಳ ಪರವಾಗಿ ಹೋರಾಡಿದ ಡಾ. ಬಿ. ಆರ್ ಅಂಬೇಡ್ಕರ್ ರವರ ಸಾಧನೆ ಹಾಗೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5