ತುಮಕೂರು: ನಗರಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಜಿಲ್ಲೆಯ ರೈತರ ಮತ್ತು ವಿವಿಧ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ರೈತ ಸಂಘ ತೀರ್ಮಾನಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಟಿ. ಆರ್. ಯೋಗೇಶ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆ ಹಲವಾರು ಬಾರಿ ಸಚಿವ ಜಿ.ಪರಮೇಶ್ವರ್ ಸೇರಿದಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.
ಜಿಲ್ಲೆಯಲ್ಲಿ ಸಾವಿರಾರು ಕೋಟಿ ರೂ. ಅನುದಾನ ತಂದು ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸರ್ಕಾರ ಹೇಳುತ್ತಿದ್ದರೂ, ಅನೇಕ ಗ್ರಾಮಗಳಲ್ಲಿ ಇನ್ನೂ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದೆ. ಎತ್ತಿನಹೊಳೆ ಯೋಜನೆ ಪೂರ್ಣಗೊಂಡಿದೆ ಎನ್ನಲಾಗುತ್ತಿದ್ದರೂ, ಹಲವೆಡೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಸ್ಥಿತಿ ನಿರ್ಮಾಣವಾಗಿದೆ. ಬರಗಾಲದ ಪರಿಣಾಮ ಜಿಲ್ಲೆಯ ತೆಂಗು, ಅಡಿಕೆ ಸೇರಿದಂತೆ ವಾಣಿಜ್ಯ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಜಿಲ್ಲಾಡಳಿತ ಇದುವರೆಗೆ ಸಮಗ್ರ ಸರ್ವೆ ನಡೆಸಿಲ್ಲ. ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಪಿಎಸ್ಸಿ ಮಾದರಿ ಶಾಲೆಗಳನ್ನು ಆರಂಭಿಸಬೇಕು. ನಗರದ ದೇವರಾಜ್ ಅರಸ್ ಬಸ್ ಸ್ಟ್ಯಾಂಡ್ ಕಚೇರಿಯಲ್ಲಿ ಎಸ್ಕಲೇಟರ್ ಒಂದು ತಿಂಗಳಿಂದ ಕೆಟ್ಟು ನಿಂತಿದ್ದು, ಅಂಗವಿಕಲರ ಸೌಲಭ್ಯಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ತುರುವೇಕೆರೆಯಲ್ಲಿ ರಾಗಿ ಖರೀದಿ ಕೇಂದ್ರಗಳಲ್ಲಿ ನಕಲಿ ಐಡಿ ಸೃಷ್ಟಿಸಿ ರಾಗಿ ಮಾರಾಟ ಮಾಡುವ ಜಾಲ ಕಾರ್ಯನಿರ್ವಹಿಸುತ್ತಿದ್ದು, ಅದನ್ನು ಪತ್ತೆ ಹಚ್ಚುವಲ್ಲಿ ಅಧಿಕಾರಿಗಳು ವಿಫಲಾಗಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಕೃಷ್ಣ ಬೈರೇಗೌಡ ಅವರು ಸಭೆಗಳಲ್ಲಿ ಪರಿಹಾರ ಹಾಗೂ ದುರಸ್ತಿ ಕಾರ್ಯಗಳ ಬಗ್ಗೆ ಭರವಸೆ ನೀಡುತ್ತಿದ್ದರೂ, ಕೋಡಿ ಹಾನಿಗೊಳಗಾದ ರೈತರಿಗೆ ಒಂಬತ್ತು ತಿಂಗಳಾದರೂ ಪರಿಹಾರ ದೊರೆತಿಲ್ಲ. ಕಂದಾಯ ಇಲಾಖೆ ಸಂಪೂರ್ಣ ವಿಫಲವಾಗಿದ್ದು, ತಹಶೀಲ್ದಾರ್ಗಳು ಕೇವಲ ಪ್ರಗತಿ ವರದಿ ತೋರಿಸುತ್ತಿದ್ದಾರೆ ಹೊರತು ರೈತರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಮುಂದುವರಿದಿದೆ. ಈ ಕುರಿತು ಮೇ.20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಎಲ್ಲಾ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಗುವುದು. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಸ್ತೆ ತಡೆ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಸಿದರು.
ಈ ಸಂದರ್ಭದಲ್ಲಿ ನಟರಾಜ್ ಮಾತನಾಡಿ, ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ಆರೋಪಿಸಿದರು. ದಿನಕ್ಕೆ 6 ಗಂಟೆಗಳ ಕಾಲವೂ ನಿರಂತರ ವಿದ್ಯುತ್ ನೀಡದೆ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ, ರೈತರ ಮಕ್ಕಳಿಗೂ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಚಂದ್ರಶೇಖರ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಾಗಿ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸಬೇಕು ಎಂದು ಒತ್ತಾಯಿಸಿದರು. ಜೊತೆಗೆ, ಭೂಮಿ ಕಳೆದುಕೊಳ್ಳುತ್ತಿರುವ ಎಲ್ಲರಿಗೂ ಏಕರೂಪದ ಮತ್ತು ನ್ಯಾಯಸಮ್ಮತ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಎಚ್.ಬಿ ಶಿವಲಿಂಗಯ್ಯ, ಅಶೋಕ್ ಕುಮಾರ್, ನಟರಾಜ್, ಸುಧಾ ಮುಂತಾದ ರೈತ ಮುಖಂಡರು ಉಪಸ್ಥಿತರಿದ್ದರು.
ಹೇಮಾವತಿ ನಾಲಾ ಯೋಜನೆ ಆರಂಭವಾಗಿ 16 ವರ್ಷ ಕಳೆದರೂ ರೈತರಿಗೆ ಭೂ ಪರಿಹಾರ ನೀಡಿಲ್ಲ. ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ ರೈತರಿಗೆ ಭೂಮಿ ಮಂಜೂರು ಮಾಡಬೇಕು. ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ಹಾಗೂ ಶಾಸಕರು ರೈತರ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿಯೂ ಮತ್ತು ಹೊರಗಡೆಯೂ ಗಂಭೀರವಾಗಿ ಸ್ಪಂದಿಸಿಲ್ಲ. ಇದರಿಂದ ತುಮಕೂರು ಜಿಲ್ಲೆಯ ಬಗ್ಗೆ ಜನಪ್ರತಿನಿಧಿಗಳಿಗೆ ಕಾಳಜಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ.
— ಟಿ. ಆರ್. ಯೋಗೇಶ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


