ಸರಗೂರು: ಪಟ್ಟಣದ ಅರಣ್ಯ ಇಲಾಖೆ ಮುಂಭಾಗದಲ್ಲಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯವು ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಸರಿಯಾದ ವಸತಿ ಹಾಗೂ ಊಟದ ವ್ಯವಸ್ಥೆಯೇ ದೊರೆಯುತ್ತಿಲ್ಲ. ಜೊತೆಗೆ ಹಾಸ್ಟೆಲ್ ಸಿಬ್ಬಂದಿ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿದೆ.
ಹಾಸ್ಟೆಲ್ ವಾರ್ಡನ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅಡುಗೆ ಸಿಬ್ಬಂದಿ ಕೂಡ ತೀವ್ರ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹಾಸ್ಟೆಲ್ ಅವ್ಯವಸ್ಥೆಯ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಗಮನಕ್ಕೆ ಸಾಕಷ್ಟು ಬಾರಿ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ಹಾಸ್ಟೆಲ್ ಪಕ್ಕದಲ್ಲಿ ಅಂಬೇಡ್ಕರ್ ಭವನ ಇದೆ. ಮದುವೆ ಇನ್ನಿತರ ಕಾರ್ಯಕ್ರಮ ನಡೆದರೆ, ಬೆಳಿಗ್ಗೆ ಮತ್ತು ಸಂಜೆ ಭವನದಿಂದ ಮಕ್ಕಳನ್ನು ಕರೆದುಕೊಂಡು ಹೋಗಿ ಅಲ್ಲಿಂದಲೇ ಊಟವನ್ನು ತೆಗೆದುಕೊಂಡು ಬಂದು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊಡುತ್ತಾರೆ. ವಾರ್ಡನ್ ಗೆ ಈ ಬಗ್ಗೆ ವಿದ್ಯಾರ್ಥಿಗಳು ದೂರು ನೀಡಿದರೆ, ನಾಳೆ ಬಂದು ಸರಿ ಮಾಡುತ್ತೇನೆ ಎಂದು ತಪ್ಪಿಸಿಕೊಳ್ಳುತ್ತಿದ್ದಾರೆ.
ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳು ಕೂಡ ಇಲ್ಲವಾಗಿದ್ದು, ಸ್ವಚ್ಛತೆಯೇ ಇಲ್ಲ. ವಿದ್ಯಾರ್ಥಿಗಳಿಗೆ ಕನಿಷ್ಠ ಫ್ಯಾನ್ ವ್ಯವಸ್ಥೆ ಕೂಡ ಸರಿಯಾಗಿ ಮಾಡಿಕೊಟ್ಟಿಲ್ಲ. ಸರ್ಕಾರದಿಂದ ಬಂದಂತಹ ಪೀಠೋಪಕರಣಗಳನ್ನು ಕೂಡ ಹಾಸ್ಟೆಲ್ ಗೆ ನೀಡುತ್ತಿಲ್ಲ. ಶನಿವಾರ ಮತ್ತು ಭಾನುವಾರ ಮಕ್ಕಳನ್ನು ಮನೆಗೆ ಹೋಗಿ ಎಂದು ಅಡುಗೆ ಸಿಬ್ಬಂದಿ ಹೇಳುತ್ತಿದ್ದು, ಈ ಬಗ್ಗೆ ಪ್ರಶ್ನಿಸಿದರೆ ವಾರ್ಡನ್ ಹೇಳಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಹಾಸ್ಟೆಲ್ ಗೆ ಕಾವಲುಗಾರ ಕೂಡ ಇಲ್ಲ. ಹೊರಗಿನ ಜನರು ಬಂದು ಹಾಸ್ಟೆಲ್ ನಲ್ಲಿ ತಮ್ಮದೇ ಕಾರುಬಾರು ಮಾಡುತ್ತಿದ್ದಾರೆ. ಯಾರು ಬಂದರೂ ಯಾರು ಹೋದರೂ ಯಾರೂ ಕೇಳುವವರೇ ಇಲ್ಲದಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy