ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಬೇಕೆಂದು ತುಮಕೂರು ನಗರ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ರವರು ತುಮಕೂರು ಮಹಾನಗರಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ದೇಶದ ಸುಸಜ್ಜಿತವಾದ ಮಹಾನಗರಪಾಲಿಕೆಗಳಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗಿ ಸಾವು–ನೋವು ಉಂಟಾಗುತ್ತಿರುವುದು ನಮಗೆಲ್ಲಾ ಎಚ್ಚರಿಕೆಯ ಗಂಟೆಯಾಗಿದೆ. ಈ ಕಾರಣದಿಂದ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಮನೆ ಮನೆಗೂ ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ಈ ಕರ್ತವ್ಯದಲ್ಲಿ ಯಾವುದೇ ಲೋಪದೋಷಗಳನ್ನು ನಾವು ಸಹಿಸುವುದಿಲ್ಲ. ಈ ಕಾರಣದಿಂದ ಅಧಿಕಾರಿಗಳು ಎಚ್ಚೆತ್ತುಕೊಂಡು ಪ್ರತಿನಿತ್ಯ ಕಾಲೋನಿಗಳಲ್ಲಿ, ಹಾಸ್ಟೆಲ್ಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ, ಹೋಟೆಲ್ಗಳಲ್ಲಿ, ಬಸ್ ನಿಲ್ದಾಣದಲ್ಲಿ ಹಾಗೂ ನಗರದ ಬಡಾವಣೆಗಳಲ್ಲಿ ಮಹಾನಗರಪಾಲಿಕೆಯಿಂದ ಪೂರೈಕೆಯಾಗುವ ನೀರನ್ನು ಪ್ರತಿನಿತ್ಯ ತುಮಕೂರು ಮಹಾನಗರಪಾಲಿಕೆಯ ಪಿ.ಎನ್.ಆರ್. ಪಾರ್ಲ್ನಲ್ಲಿರುವ ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಕುಡಿಯುವ ನೀರನ್ನು ಒದಗಿಸಬೇಕೆಂದು ಶಾಸಕರು ಸೂಚಿಸಿದರು.
ಯು.ಜಿ.ಡಿ ನೀರು ಯಾವುದೇ ಕಾರಣಕ್ಕೂ ಕುಡಿಯುವ ನೀರು ಸರಬರಾಜು ಪೈಪ್ಲೈನ್ಗಳಿಗೆ ಮಿಶ್ರಣವಾಗದಂತೆ ಎಚ್ಚರಿಕೆ ವಹಿಸಬೇಕು. ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ 694 ಬೋರ್ವೆಲ್ಗಳ ನೀರನ್ನು ಪರೀಕ್ಷಿಸಬೇಕು. ಈ ಬೋರ್ ವೆಲ್ ನ ನೀರುಗಳು ಕುಡಿಯಲು ಯೋಗ್ಯವೇ ಎಂಬುದನ್ನು ಖಚಿತಪಡಿಸಿಕೊಂಡು ಸಾರ್ವಜನಿಕರಿಗೆ ಸರಬರಾಜು ಮಾಡಲು ನಗರ ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ತುಮಕೂರು ಮಹಾನಗರಪಾಲಿಕೆ ಆಯುಕ್ತರಾದ ಯೋಗಾನಂದ, ಉಪ-ಆಯುಕ್ತರಾದ ಮನು, ಅಧೀಕ್ಷಕ ಅಭಿಯಂತರರಾದ ಸಂದೀಪ್, ಆರೋಗ್ಯ ಅಧಿಕಾರಿಗಳಾದ ಡಾ. ಯೋಗೇಶ್, ಕಾರ್ಯಪಾಲಕ ಅಭಿಯಂತರರಾದ ವಿನಯ್, ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಕಾರ್ಯಪಾಲಕ ಅಭಿಯಂತರರಾದ ಅನಿಲ್, ಹೆಚ್ಚುವರಿ ಕಾರ್ಯಪಾಲಕ ಅಭಿಯಂತರರಾದ ಪ್ರವೀಣ್, ಮುಂತಾದ ಅಧಿಕಾರಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


