ಬೀದರ್: ಜಿಲ್ಲೆಯ ವಸತಿ ನಿಲಯದ ಆಡಳಿತ ನಿರ್ವಹಣೆಯಲ್ಲಿ ಗಂಭೀರ ಸ್ವರೂಪದ ಲೋಪಗಳು ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಕಿರಿಯ ಮೇಲ್ವಿಚಾರಕಿಯನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ್ ವಿಠಲರಾವ್ ಆದೇಶ ಹೊರಡಿಸಿದ್ದಾರೆ.
ಔರಾದ್ ತಾಲೂಕಿನ ಧೂಪತಮಹಾಗಾಂವ್ ಗ್ರಾಮದ ವಸತಿ ನಿಲಯದ ಕಿರಿಯ ಮೇಲ್ವಿಚಾರಕಿ ಶೋಭಾ ಅಮಾನತುಗೊಂಡವರಾಗಿದ್ದಾರೆ.
ಸೆಪ್ಟೆಂಬರ್ 3 ರಂದು ಜಿ.ಪಂ. ಸಿಇಒ ಗಿತ್ತೆ ಮಾಧವ್ ಅವರು ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ವೇಳೆ, ವಿದ್ಯಾರ್ಥಿಗಳ ಸುರಕ್ಷತೆ, ಆರೋಗ್ಯ ಹಾಗೂ ಶೈಕ್ಷಣಿಕ ಹಿತಾಸಕ್ತಿಗೆ ಸಂಬಂಧಿಸಿದ ವ್ಯವಸ್ಥೆಗಳಲ್ಲಿ ಹಲವು ಗೊಂದಲ ಹಾಗೂ ಅವ್ಯವಸ್ಥೆಗಳು ಕಂಡುಬಂದಿದ್ದವು.
ವಸತಿ ನಿಲಯದ ನಿರ್ವಹಣೆಯಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಕಿರಿಯ ಮೇಲ್ವಿಚಾರಕಿ ಶೋಭಾ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಅವರು ಸಲ್ಲಿಸಿದ್ದ ಲಿಖಿತ ಉತ್ತರವು ಸಮಂಜಸವಾಗಿಲ್ಲದಿರುವುದು ಪರಿಶೀಲನೆಯಲ್ಲಿ ದೃಢಪಟ್ಟಿತ್ತು.
ಕರ್ತವ್ಯಲೋಪ ಮತ್ತು ಮೇಲ್ವಿಚಾರಣೆಯಲ್ಲಿ ಎಸಗಿದ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅವರನ್ನು ಅಮಾನತುಗೊಳಿಸಲಾಗಿದೆ.
ಅಮಾನತು ಅವಧಿಯಲ್ಲಿ ನಿಯಮಾನುಸಾರ ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿರುವ ಶೋಭಾ ಅವರು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
