ಹುಬ್ಬಳ್ಳಿ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಯುವ ಪೀಳಿಗೆಯಿಂದ (ಜೆನ್ ಝೀ) ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿಯವರು ನ್ಯಾಯಯುತ ಹಾಗೂ ಪ್ರಾಮಾಣಿಕವಾಗಿ ಚುನಾವಣೆ ನಡೆಸಿದರೆ ಖಂಡಿತವಾಗಿ ಸೋಲುತ್ತಾರೆ. ಹೀಗಾಗಿಯೇ ಅವರು ನ್ಯಾಯಯುತ ಚುನಾವಣೆ ನಡೆಸಲು ಬಿಡುವುದಿಲ್ಲ ಎಂದು ಸಚಿವ ಸಂತೋಷ್ ಲಾಡ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಾರ್ವಜನಿಕರ ನೈಜ ಪ್ರಶ್ನೆಗಳಿಗೆ ಉತ್ತರಿಸದೆ, ಕೇವಲ ಧರ್ಮ ಮತ್ತು ದೇವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಯವರು ರಾಜ್ಯದಲ್ಲಿ ಬರ ಅಧ್ಯಯನ ಮಾಡುತ್ತಿರುವುದು ಒಳ್ಳೆಯ ವಿಚಾರ. ಆದರೆ ಅಧ್ಯಯನ ನಡೆಸಿ ಅದರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿ. ಇದರಿಂದಲಾದರೂ ಕೇಂದ್ರದಿಂದ ರಾಜ್ಯದ ರೈತರಿಗೆ ಬೆಳೆ ಪರಿಹಾರ ದೊರೆಯಲಿ ಎಂದು ಲಾಡ್ ಟಾಂಗ್ ನೀಡಿದರು.
ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ವಿರುದ್ಧ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ನೀಡುವಷ್ಟು ಅನುದಾನ ಕರ್ನಾಟಕಕ್ಕೆ ನೀಡುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಬೆಳೆ ಪರಿಹಾರದ ಹಣ ಇನ್ನೂ ಬಂದಿಲ್ಲ. ಬೆಳೆ ವಿಮೆಯ ನಿಯಮಗಳಲ್ಲಿ ತುರ್ತು ಬದಲಾವಣೆಯಾಗಬೇಕಿದೆ.
ರೈತರು ಮಧ್ಯಂತರ ಪರಿಹಾರ ಕೋರುತ್ತಿರುವುದು ನ್ಯಾಯಯುತವಾಗಿದೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಚಿವರು ಮತ್ತು ಅಧಿಕಾರಿಗಳ ತಂಡ ಪ್ರತಿ ತಾಲೂಕಿಗೂ ಭೇಟಿ ನೀಡಿ ಬರ ಪರಿಸ್ಥಿತಿಯ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
