ತುಮಕೂರು: ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೋಮವಾರ ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಯಾವುದೇ ಇಂತಹ ಪ್ರಕರಣಗಳು ನಡೆದಿಲ್ಲ ಹಾಗೂ ಸಫಾಯಿ ಕರ್ಮಚಾರಿಗಳು ಇರುವುದಿಲ್ಲವೆಂದು ವರದಿ ನೀಡಿದ್ದಾರೆ. ಆದರೂ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಘಟನೆಯಲ್ಲಿ ನೊಂದಿರುವ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಮಲ ಹೊರುವ ಪದ್ಧತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಆದೇಶ ಪ್ರಕಾರ ಸಂಬಂಧಿಸಿದ ಉಪವಿಭಾಗಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮಹಜರು ಮಾಡಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು. ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದ್ದರೂ ಉಪವಿಭಾಗಾಧಿಕಾರಿ ಅವರು ನೀಡುವ ದೂರಿನ ಆಧಾರದ ಮೇಲೆ ಪ್ರಕರಣ ನಿಲ್ಲಲಿದ್ದು, ತಕ್ಷಣ ಕಾರ್ಯೋನ್ಮುಖರಾಗಿ ದೂರು ದಾಖಲಿಸುವಂತೆ ಉಪ ವಿಭಾಗಾಧಿಕಾರಿಗೆ ಅವರು ಸೂಚನೆ ನೀಡಿದರು.
ಅಲ್ಲದೆ, ಪ್ರಕರಣ ಗಂಭೀರ ಸ್ವರೂಪದ್ದಾಗಿರುವುದರಿಂದ ಘಟನೆಯ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಬಗ್ಗೆ ತಕ್ಷಣ ಆಯೋಗಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಅವರು ಸೂಚಿಸಿದರು.
ಕೆಇಬಿ ಸಮುದಾಯ ಭವನ ನಗರದ ಹೃದಯ ಭಾಗದಲ್ಲಿದ್ದು, ಯುಜಿಡಿ ವ್ಯವಸ್ಥೆಯ ಪಕ್ಕದಲ್ಲೇ ಪಿಟ್ ಗುಂಡಿಗಳನ್ನು ಯಾವ ಕಾರಣಕ್ಕೆ ಮಾಡಲಾಗಿದೆ? ಹಾಗೂ ಇಂತಹ ಸಮುದಾಯ ಭವನಗಳು, ಮದುವೆ ಮಂಟಪಗಳು, ಹೋಟೆಲ್ಗಳು ಇತ್ಯಾದಿ ಕಟ್ಟಡಗಳ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಅನುಮತಿ ಕೊಡುವ ಮಹಾನಗರಪಾಲಿಕೆ ಇಂತಹ ವಿಷಯಗಳಲ್ಲಿ ಗಮನ ಹರಿಸುವುದಿಲ್ಲವೇ ಎಂಬ ಇತ್ಯಾದಿ ವಿಷಯಗಳ ಬಗ್ಗೆ ಅವರು ಗಂಭೀರವಾಗಿ ಪ್ರಶ್ನಿಸಿದರು.
ಪ್ರಕರಣದಲ್ಲಿ ಪರಿಶಿಷ್ಟ ಜಾತಿಯ ಕಾರ್ಮಿಕರನ್ನು ಬಳಸಿಕೊಂಡಿರುವುದು ಕಂಡು ಬಂದಿದ್ದು, ಉಪ ವಿಭಾಗಾಧಿಕಾರಿಗಳು ಈ ಕೂಡಲೇ ಯಾವ ಯಾವ ನಿಯಮಗಳಲ್ಲಿ ಪ್ರಾಥಮಿಕ ವರದಿಯಲ್ಲಿ ಕೇಸು ದಾಖಲಿಸಬಹುದೆಂಬ ಬಗ್ಗೆ ಗಮನಹರಿಸಿ ತಕ್ಷಣವೇ ಕಾನೂನು ಕ್ರಮ ಜರುಗಿಬೇಕು ಅಧ್ಯಕ್ಷರು ಜಿಲ್ಲಾಡಳಿತಕ್ಕೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಮಹಾನಗರಪಾಲಿಕೆ ಆಯುಕ್ತ ಬಿ.ಶುಭ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜಂ ಜಂ, ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಒಬಳೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ತುಮಕೂರು ಫಲಶ್ರುತಿ:
ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಬಗ್ಗೆ ನಮ್ಮ ತುಮಕೂರು ವಿಶೇಷ ವರದಿಯನ್ನು ಪ್ರಕಟಿಸಿದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಎಚ್ಚೆತ್ತುಕೊಂಡು ಇದೀಗ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




