ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಸಿ. ವಿಜಯ್ ಜೋಸೆಫ್ ಅವರ ಭೇಟಿಯನ್ನು ಮುಂದೂಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಕಾವೇರಿ ನೀರು ಹಂಚಿಕೆ ಪ್ರಾಧಿಕಾರವು (CWMA) ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ನಿರ್ದೇಶನದಿಂದಾಗಿ ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಉದ್ವಿಗ್ನ ವಾತಾವರಣ ಹಾಗೂ ಪ್ರತಿಭಟನೆಗಳು ಹೆಚ್ಚಾಗಿವೆ. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅಭಿನಯದ ಇತ್ತೀಚಿನ ‘ಜನನಾಯಕನ್’ ಚಿತ್ರದ ಪೋಸ್ಟರ್ಗಳನ್ನು ಹರಿದುಹಾಕಿ, ಕೆಲವು ಕಡೆ ಪ್ರದರ್ಶನವನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ.
“ಪರಿಸ್ಥಿತಿ ಸಂಪೂರ್ಣ ಶಾಂತವಾದ ಬಳಿಕ, ಉತ್ತಮ ವಾತಾವರಣದಲ್ಲಿ ಸ್ನೇಹಪೂರ್ವಕವಾಗಿ ಸಭೆ ನಡೆಸೋಣ. ಹಾಗಾಗಿ ತಾತ್ಕಾಲಿಕವಾಗಿ ತಮ್ಮ ಭೇಟಿಯನ್ನು ಮುಂದೂಡಬೇಕೆಂದು ತಮಿಳುನಾಡು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ”. “ಕರ್ನಾಟಕವು ಎಂದಿಗೂ ಎಲ್ಲ ರಾಜ್ಯಗಳ ಜನರನ್ನು ಗೌರವದಿಂದ ಬರಮಾಡಿಕೊಂಡಿದೆ. ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸುವುದು ನಮ್ಮ ಸಂಸ್ಕೃತಿ, ಯಾರ ಭಾವನೆಗೂ ಧಕ್ಕೆ ಆಗಬಾರದು” ಎಂದು ಅವರು ಹೇಳಿದ್ದಾರೆ.
ಕರ್ನಾಟಕವು ಶಾಂತಿಪ್ರಿಯ ರಾಜ್ಯವಾಗಿದ್ದು, ತಮಿಳುನಾಡಿನ ಸಾವಿರಾರು ಜನರು ಇಲ್ಲಿ ಉದ್ಯೋಗದಲ್ಲಿದ್ದಾರೆ ಹಾಗೂ ಕನ್ನಡಿಗರು ಸಹ ತಮಿಳುನಾಡಿನಲ್ಲಿದ್ದಾರೆ. ಭಾವೋದ್ವೇಗದ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.
ಮೇಕೆದಾಟು ಸಮತೋಲನ ಜಲಾಶಯ, ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ತಿಳಿಸಿದ ಡಿ.ಕೆ. ಶಿವಕುಮಾರ್, ಇದು ಕೇವಲ 66 ಟಿಎಂಸಿ ಸಾಮರ್ಥ್ಯದ ಸಮತೋಲನ ಜಲಾಶಯವಾಗಿದ್ದು, ಇದರ ನೀರನ್ನು ಹೊಸ ನೀರಾವರಿ ಯೋಜನೆಗಳಿಗೆ ಬಳಸುವ ಅಧಿಕಾರ ಕರ್ನಾಟಕಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡುವ ಜವಾಬ್ದಾರಿಯನ್ನು ಪುನರುಚ್ಚರಿಸಿರುವ ಸುಪ್ರೀಂ ಕೋರ್ಟ್, ತನ್ನ ಭೂಪ್ರದೇಶದಲ್ಲಿ ಸಮತೋಲನ ಜಲಾಶಯ ನಿರ್ಮಿಸುವ ಹಕ್ಕನ್ನೂ ಕರ್ನಾಟಕಕ್ಕೆ ಮಾನ್ಯ ಮಾಡಿದೆ ಎಂದರು.
ಮೇಕೆದಾಟು ಯೋಜನೆ ಕುರಿತು ಕೇಳಲಾದ ಕೆಲವು ಸ್ಪಷ್ಟೀಕರಣಗಳನ್ನು ಅಧ್ಯಯನ ಮಾಡಿ ಕಾನೂನು ವ್ಯಾಪ್ತಿಯಲ್ಲಿ ಅಗತ್ಯ ವಿವರಣೆ ಸಲ್ಲಿಸಲಾಗುವುದು ಹಾಗೂ ಕಾವೇರಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಭಾನುವಾರ ರಾಜ್ಯದಲ್ಲಿ ಸರ್ವಪಕ್ಷ ಸಭೆ ನಿಗದಿಯಾಗಿದ್ದು, ಸಭೆಯ ಬಳಿಕ ರಾಜ್ಯದ ಪರಿಸ್ಥಿತಿ ಶಾಂತವಾದ ತಕ್ಷಣ ತಮಿಳುನಾಡು ಮುಖ್ಯಮಂತ್ರಿಯವರನ್ನು ಮಾತುಕತೆಗೆ ಮತ್ತೊಮ್ಮೆ ಆಹ್ವಾನಿಸುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
