ಪಾವಗಡ: ತಾಲ್ಲೂಕಿನ ಯ.ನಾ.ಹೊಸಕೋಟೆ ಹೋಬಳಿಯ ಚಿಕ್ಕಜಾಲೋಡು ಗ್ರಾಮದಲ್ಲಿ ಚರಂಡಿ ನಿರ್ಮಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಮಂಗಳವಾರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಚಿಕ್ಕಜಾಲೋಡು ಗ್ರಾಮದ ಸರಕಾರಿ ಶಾಲೆಯ ಸುತ್ತಮುತ್ತ ಮಳೆ ನೀರು, ಚರಂಡಿ ನೀರು ಸಂಗ್ರಹಗೊಂಡು ಪರಿಸರ ಮಾಲಿನ್ಯವಾಗುತ್ತಿದೆ. ಕ್ರಿಮಿಕೀಟಗಳು ಹೆಚ್ಚಾಗಿದ್ದು, ದುರ್ವಾಸನೆ ಬರುತ್ತಿದೆ. ಶಾಲಾ ಮಕ್ಕಳು, ಸಾರ್ವಜನಿಕರು ಕೊಳಚೆ ನೀರಿನಲ್ಲೇ ಓಡಾಡಬೇಕಾಗಿದೆ. ಈ ನೀರು ಖಾಸಗಿ ಜಮೀನಿನಲ್ಲಿ ಹರಿಯಬೇಕಾಗಿದೆ. ಆದರೆ ಖಾಸಗಿಯವರು ಇದಕ್ಕೆ ಅವಕಾಶ ನೀಡುತ್ತಿಲ್ಲ. ಇದರಿಂದ ರಸ್ತೆ ಮೇಲೆ ನೀರು ಸಂಗ್ರಹಗೊಂಡು ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆಯ ಬಗ್ಗೆ ದೂರು ನೀಡಿದ್ದೇವೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಚರಂಡಿ ಕಾಮಗಾರಿ ಆರಂಭಿಸುವುದಾಗಿ ಪಿಡಿಒ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಗಿದೆ. ಕಾಮಗಾರಿ ಆರಂಭಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಇದೇ ವೇಳೆ ದೊಡ್ಡಜಾಲೋಡು ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡುವ ಪ್ರಕ್ರಿಯೆಯ ಅಂಗವಾಗಿ ನಿವೇಶನ ಸಮೀಕ್ಷೆಗೆ ಆಗಮಿಸಿದ್ದ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸಮಸ್ಯೆ ಕುರಿತು ಮನವಿ ಸಲ್ಲಿಸಲಾಯಿತು. ತಹಸೀಲ್ದಾರ್ ಇಒ ಅವರನ್ನು ಸ್ಥಳಕ್ಕೆ ಕರೆಸಿ ಸಮಸ್ಯೆ ಬಗೆಹರಿಸುವಂತೆ ಆದೇಶಿಸಿದರು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy