ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತಾದ ಊಹಾಪೋಹಗಳು ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ನಿಂದ ದಿಢೀರ್ ಬುಲಾವ್ ಬಂದಿದೆ. ನಾಳೆ (ಮೇ 26) ದೆಹಲಿಯಲ್ಲಿ ನಡೆಯಲಿರುವ ಪ್ರಮುಖ ಸಭೆಗೆ ಹೈಕಮಾಂಡ್ ತಮ್ಮನ್ನು ಆಹ್ವಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಖುದ್ದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ನನ್ನನ್ನು ಹೈಕಮಾಂಡ್ ದೆಹಲಿಗೆ ಆಹ್ವಾನಿಸಿದೆ. ನಾಳೆ ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಸಭೆ ನಿಗದಿಯಾಗಿದೆ. ಆದರೆ ಸಭೆಯ ಅಜೆಂಡಾ (ವಿಷಯ) ಏನೆಂಬುದು ನನಗೆ ತಿಳಿದಿಲ್ಲ. ನಿನ್ನೆ ರಾತ್ರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕರೆ ಮಾಡಿ ಸಭೆಯ ದಿನಾಂಕ ಮತ್ತು ಸಮಯದ ಬಗ್ಗೆ ಮಾಹಿತಿ ನೀಡಿದರು. ಹಾಗಾಗಿ ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.
ಮೇ 20ರಂದು ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. 2023ರ ವಿಧಾನಸಭಾ ಚುನಾವಣೆ ಗೆಲುವಿನ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರದ ಒಪ್ಪಂದವಾಗಿತ್ತು ಎಂಬ ವರದಿಗಳ ಹಿನ್ನೆಲೆಯಲ್ಲಿ, ಶಿವಕುಮಾರ್ ಬೆಂಬಲಿಗರು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ತಾವು ಪೂರ್ಣ 5 ವರ್ಷಗಳ ಅವಧಿಗೆ ಸಿಎಂ ಆಗಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ಈ ಹಿಂದೆ ಹೇಳಿಕೆ ನೀಡಿದ್ದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ:
ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ನನ್ನನ್ನು ಹೈಕಮಾಂಡ್ ದೆಹಲಿಗೆ ಕರೆದರೆ ನಾನು ಖಂಡಿತ ಹೋಗುತ್ತೇನೆ. ಮುಖ್ಯಮಂತ್ರಿ ಬದಲಾವಣೆ ಕುರಿತಾದ ಪ್ರಶ್ನೆಗಳಿಗೆ ಸಮಯವೇ ಉತ್ತರ ನೀಡಲಿದೆ” ಎಂದು ಹೇಳಿದ್ದಾರೆ. ಜೊತೆಗೆ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ತಾವು ಬದ್ಧವಾಗಿರುವುದಾಗಿ ತಿಳಿಸಿದ್ದಾರೆ.
ಪಕ್ಷದ ಆಂತರಿಕ ಮೂಲಗಳ ಪ್ರಕಾರ, ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆಗೆ ಒಲವು ತೋರಿದ್ದಾರೆ. ಹೈಕಮಾಂಡ್ ಸದ್ಯಕ್ಕೆ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದರೆ, ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಮುಂದುವರಿಯಲಿದ್ದಾರೆ ಎಂಬ ಸ್ಪಷ್ಟ ಸಂದೇಶ ರವಾನೆಯಾಗಲಿದೆ. ಪ್ರಸ್ತುತ ರಾಜ್ಯ ಸಂಪುಟದಲ್ಲಿ 34 ಸಚಿವ ಸ್ಥಾನಗಳ ಪೈಕಿ 3 ಸ್ಥಾನಗಳು ಖಾಲಿ ಇವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


