ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದ್ದು ಸಂಭ್ರಮಿಸಲು ರಾಜ್ಯ ರಾಜಧಾನಿ ಬೆಂಗಳೂರು ಸಜ್ಜಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ವಕೀಲ ಎನ್.ಪಿ. ಅಮೃತೇಶ್ ಎಂಬವರು ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ನಟರಾಜ್, ಕೆ.ವಿ. ಅರವಿಂದ ಅವರಿದ್ದ ಪೀಠ, ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ನಿರ್ಬಂಧ ಹೇರಲು ನಿರಾಕರಿಸಿದೆ.
ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸುವಂತೆ ವಕೀಲ ಅಮೃತೇಶ್ ಮನವಿ ಮಾಡಿದ್ದರು. ಆದರೆ ಇದನ್ನು ತಿರಸ್ಕರಿಸಿದ ಹೈಕೋರ್ಟ್ ನ್ಯಾಯಪೀಠ, ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದರೆ ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಕೋವಿಡ್ ಗೆ ಸದ್ಯಕ್ಕೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ ಎಂದು ಹೇಳಿದ್ದು, ಕೋವಿಡ್ ನಿರ್ಬಂಧ ಕುರಿತ ಮುಂದಿನ ವಿಚಾರಣೆಯನ್ನು ಜನವರಿಗೆ ಮುಂದೂಡಿದೆ.


