ಸರಗೂರು: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಗ್ರಾಮದ ದಲಿತ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿನಿ ಹಾಗೂ ರಾಜ್ಯಮಟ್ಟದ ಕಬಡ್ಡಿ ಆಟಗಾರ್ತಿ , ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಭೀಕರ ಕೊಲೆಯನ್ನು ಖಂಡಿಸಿ, ಸರಗೂರು ಪಟ್ಟಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಮಹಿಳಾ ಘಟಕದ ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಮಿನಿ ವಿಧಾನಸೌಧ ಕಚೇರಿಯ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಸಂಸ (ಅಂಬೇಡ್ಕರ್ ವಾದ) ಮಹಿಳಾ ಜಿಲ್ಲಾ ಸಂಚಾಲಕಿ ಕೋಟೆ ಅನುಷಾ ಅವರು, “ಉದಯೋನ್ಮುಖ ಕ್ರೀಡಾಪಟುವಾಗಿದ್ದ ಅಪ್ರಾಪ್ತ ಬಾಲಕಿಯನ್ನು ಕಿಡಿಗೇಡಿಗಳು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಅತ್ಯಂತ ನಿಕೃಷ್ಟ ಕೃತ್ಯವಾಗಿದೆ. ಬಂಧಿತನಾಗಿರುವ ಆರೋಪಿಯು ಯಾವುದೇ ಕಾರಣಕ್ಕೂ ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳದಂತೆ ಆತನಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.
ಮಹಿಳಾ ಘಟಕದ ಮುಖಂಡ ಪೂರ್ಣಿಮಾ ಮಾತನಾಡಿ, “ಬಾಲಕಿಯ ಮೇಲಿನ ಈ ಕ್ರೂರ ದೌರ್ಜನ್ಯ ಮತ್ತು ಹತ್ಯೆ ಪ್ರಕರಣ ಇಡೀ ಮಾನವೀಯತೆಯೇ ತಲೆತಗ್ಗಿಸುವಂತೆ ಮಾಡಿದೆ. ದೇಶಕ್ಕೆ 75 ವರ್ಷಗಳ ಸ್ವಾತಂತ್ರ್ಯ ಸಿಕ್ಕಿದ್ದರೂ ಈ ನೆಲದ ಮೂಲ ನಿವಾಸಿಗಳ ಬದುಕು ಇನ್ನೂ ಶೋಚನೀಯವಾಗಿದೆ. ಒಂದೆಡೆ ದಲಿತ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದರೆ, ಇನ್ನೊಂದೆಡೆ ಮೇಲ್ವರ್ಗದವರ ದೌರ್ಜನ್ಯ ನಿರಂತರವಾಗಿ ನಡೆಯುತ್ತಿದೆ. ಇಂತಹ ರಾಕ್ಷಸ ಕೃತ್ಯ ಎಸಗುವವರಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನಿನ ಮುಂದೆ ಎಲ್ಲರೂ ಒಂದೇ ಎಂಬ ಕಟ್ಟುನಿಟ್ಟಿನ ತನಿಖೆ ನಡೆಸಿ, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು,” ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ದಸಂಸ ಅಂಬೇಡ್ಕರ್ ವಾದ ಸಂಘಟನೆಯ ತಾಲೂಕು ಸಂಚಾಲಕ ಸಣ್ಣ ಕುಮಾರ್, ಮುಖಂಡರಾದ ಅನುಷಾ ಕೋಟೆ, ಪೂರ್ಣಿಮಾ ಮೈಸೂರು, ಜ್ಯೋತಿ, ಸುಮಾ, ರತ್ನ, ಗಂಗಾಬಾಯಿ, ಶಿರಮ್ಮ, ವೆಂಕಟಲಕ್ಷ್ಮಿ, ಸುಧಾ, ಸರೋಜಾ, ಶೈಲಾ, ಸುಧಾಮಣಿ, ಶಶಿಕಲಾ, ಜ್ಯೋತಿ, ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


