ತುಮಕೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿಯ ಎನ್ ಪುರ ಗ್ರಾಮದ ಕಲ್ಲೇಶ್ವರ ಸ್ವಾಮಿ ದೇಗುಲದ ರಥಕ್ಕೆ ಆಸಾಮಿಯೊಬ್ಬ ಬೆಂಕಿ ಇಟ್ಟು ಸಂಪೂರ್ಣವಾಗಿ ಸುಟ್ಟು ಹಾಕಿದ್ದನು.

ಸುಟ್ಟಿರುವ ರಥವನ್ನು ಹೆಚ್ಚು ದಿನ ನಿಲ್ಲಿಸಬಾರದು ಎಂಬ ಕಾರಣದಿಂದ ಮಂಗಳವಾರ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಸೇರಿಕೊಂಡು ಸುಟ್ಟಿರುವ ರಥಕ್ಕೆ ವಿಶೇಷಪೂಜೆ ಸಲ್ಲಿಸಿ ಹೋಮ ಹವನಗಳನ್ನು ನಡೆಸಿ ತೇವಡಿಹಳ್ಳಿ ಮಠದ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಟ್ಟದಹಳ್ಳಿ ಚಂದ್ರಶೇಖರ ಸ್ವಾಮೀಜಿಗಳ ದಿವ್ಯ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮಣ್ಣಿನಲ್ಲಿ ಮುಚ್ಚಿ ಸಂಸ್ಕಾರ ಮಾಡಲಾಯಿತು.

ರಥ ಕಲ್ಲೇಶ್ವರ ಸ್ವಾಮಿ ಜಾತ್ರೆಯನ್ನು ನಿಲ್ಲಿಸಲು ತೀರ್ಮಾನಿಸಿದ್ದ ಗ್ರಾಮಸ್ಥರು ಧಾರ್ಮಿಕ ಗುರುಗಳ ಹಾಗೂ ಸ್ವಾಮೀಜಿಗಳ ಸಲಹೆಯಂತೆ ಜಾತ್ರೆಯನ್ನು ಧಾರ್ಮಿಕವಾಗಿ ನೆರವೇರಿಸಲು ಮುಂದಾಗಿದ್ದಾರೆ.

ಕಲ್ಲೇಶ್ವರಸ್ವಾಮಿ ರಥ ಇಲ್ಲದೇ ಇರುವುದರಿಂದ ಗ್ರಾಮದಲ್ಲಿರುವ ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದ ರಥವನ್ನೇ ಬಳಸಿಕೊಂಡು ಈ ಬಾರಿ ಸಂಪ್ರದಾಯ ಬದ್ಧವಾಗಿ ಜಾತ್ರೆಯನ್ನು ನಡೆಸಲಾಗುತ್ತಿದೆ. ಮುಂದಿನ ವರ್ಷದೊಳಗೆ ಅಗತ್ಯವಿರುವ ಕ್ರಮ ಕೈಗೊಂಡು ನೂತನ ರಥೋತ್ಸವವನ್ನು ಮಾಡಿಸಲೇಬೇಕಿದೆ ಎಂದು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಈಗಾಗಲೇ ರಥವನ್ನು ಸುಟ್ಟ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ನಿಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


