ಸಕಾಲ ಯೋಜನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲ 1202 ಸೇವೆಗಳನ್ನು ಮುಂದಿನ 8 ತಿಂಗಳಲ್ಲಿ ಜನಸಾಮಾನ್ಯರಿಗೆ ಆನ್ ಲೈನ್ ನಲ್ಲಿ ಲಭ್ಯವಾಗುವಂತೆ ಮಾಡಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸೋಮವಾರ ಎಲ್ಲಾ ಇಲಾಖೆಗಳ ಅಧಿಕಾರಿಗಳ ಜೊತೆ ಸಕಾಲ ಯೋಜನೆಯ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಸಕಾಲ ಯೋಜನೆಯಡಿ 101 ಇಲಾಖೆಯ 1082 ಸೇವೆಗಳನ್ನು ಈಗಾಗಲೆ ಜನರಿಗೆ ಒದಗಿಸಲಾಗುತ್ತಿದೆ. ಇದೀಗ ಹೊಸದಾಗಿ 120 ಸೇವೆಗಳನ್ನು ಸೇರಿಸಲಾಗಿದೆ. ಆದರೆ, ಹೊಸ ಸೇವೆ ಸೇರಿ ಕೆಲವು ಸೇವೆಗಳು ಇನ್ನೂ ಪೇಪರ್ ಅಪ್ಲಿಕೇಶನ್ ಮೋಡ್ನಲ್ಲಿದ್ದು, ಮುಂದಿನ 8 ತಿಂಗಳೊಳಗಾಗಿ ಡಿಜಿಟಲೀಕರಿಸಬೇಕು ಎಂದು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.
ಸಕಾಲದಲ್ಲಿ ಲಭ್ಯವಿರುವ 1202 ಸೇವೆಗಳ ಪೈಕಿ 922 ನಾಗರಿಕ ಹಾಗೂ 280 ಸಿಬ್ಬಂದಿ ಸೇವೆಗಳನ್ನು ನೀಡಲಾಗುತ್ತಿದೆ. ಆದರೆ, ಈ ಪೈಕಿ 802 ಸೇವೆಗಳನ್ನು ಮಾತ್ರ ಸೇವಾಸಿಂಧು ಆನ್ ಲೈನ್ ನಲ್ಲಿ ಒದಗಿಸಲಾಗುತ್ತಿದೆ. ಉಳಿದಂತೆ 120 ಸೇವೆಗಳು ಪೇಪರ್ ಅಪ್ಲಿಕೇಶನ್ ಮೋಡ್ ನಲ್ಲಿ ಲಭ್ಯವಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಲಭ್ಯವಾಗುವ ಸೇವೆಗಳು ದಾಖಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಅರ್ಜಿಯಿಂದ ಹಿಡಿದು ಸೇವೆಯವರೆಗೆ ಎಲ್ಲವೂ ಸಹ ಡಿಜಿಟಲೀಕಣಗೊಳ್ಳಬೇಕು. ಎಲ್ಲವೂ ಆನ್ ಲೈನ್ನಲ್ಲಿ ದಾಖಲಾಗಬೇಕು. ಅಲ್ಲದೆ, ಏಕಗವಾಕ್ಷಿ ಸೇವಾ ಸಿಂಧು ಪೋರ್ಟಲ್ ನೊಂದಿಗೆ ಸಂಯೋಜಿಸಿ ಸೇವಾ ಸಿಂಧು ಪೋರ್ಟಲ್ ಮೂಲಕ ಲಭ್ಯವಾಗುವಂತೆ ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


