ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ವಿ.ಸೋಮಣ್ಣ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 28, 29 ಮತ್ತು 30 ಏಪ್ರಿಲ್ 2025ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ. ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿರುತ್ತಾರೆ. ಈ ವಿಷಯದ ಬಗ್ಗೆ ಇಂದು ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW