ಬೆಂಗಳೂರು: ಸಮಾಜದ ಹೆಸರಿನಲ್ಲಿ ಸಭೆ ಸಂಘಟಿಸಬೇಡಿ, ಅದರ ಬದಲು ಪಕ್ಷ ಸಂಘಟನೆಗೆ ಒತ್ತು ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದು, ಈ ಮೂಲಕ ವಿರೋಧಿ ಬಣ ಯತ್ನಾಳ್ ಮತ್ತು ತಂಡಕ್ಕೆ ಟಾಂಗ್ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಸಮ ಸಮಾಜ ಕಟ್ಟಲು ತಮ್ಮನ್ನು ಸಮರ್ಪಿಸಿಕೊಂಡ ಅಣ್ಣ ಬಸವಣ್ಣನವರ ತತ್ವ ಅನುಸರಿಸಿ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ “ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು” ಎಂಬ ಧ್ಯೇಯ ಪಾಲಿಸಿ ಆಡಳಿತ ನಡೆಸಿದವರು ಮಾನ್ಯ ಬಿ.ಎಸ್. ಯಡಿಯೂರಪ್ಪನವರು, ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿರುವ ನಾನು ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದವನು ಎಂಬ ಬಗ್ಗೆ ಕಾಳಜಿ ಪೂರ್ವಕ ಹೆಮ್ಮೆ ಇರಿಸಿಕೊಂಡಿದ್ದೇನೆ,ಈ ನಿಟ್ಟಿನಲ್ಲಿ ಸಮಾಜದ ಆಶಯಕ್ಕೆ ಪೂರಕವಾಗಿ ಸರ್ವ ಸಮಾಜಗಳ ಬಗ್ಗೆ ಸಮಭಾವ ಇಟ್ಟುಕೊಂಡು ಒಟ್ಟು ಸಮಾಜದ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಚಿಂತಿಸುವವನು, ಆ ಮೂಲಕ ಸಮಗ್ರ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಹಾಗೂ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಮಹಾ ಸಂಕಲ್ಪದ ಗುರಿ ಸಾಧಿಸಲು ಪರಿಶ್ರಮಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಸಿದ್ದಾಂತ ಪ್ರತಿಪಾದಿಸುವ ಒಬ್ಬ ನಿಷ್ಠ ಕಾರ್ಯಕರ್ತನಾಗಿ ಹೆಜ್ಜೆ ಇಡುತ್ತಿದ್ದೇನೆ ಎಂದಿದ್ದಾರೆ.
ಕೆಲವು ಹಿತೈಷಿಗಳು ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನನ್ನ ಹಾಗೂ ಮಾನ್ಯ ಬಿ.ಎಸ್.ಯಡಿಯೂರಪ್ಪನವರ ಮೇಲಿನ ಅಭಿಮಾನದ ಕಾರಣಕ್ಕಾಗಿ ವೀರಶೈವ ಲಿಂಗಾಯತ ಸಮುದಾಯದ ಸರಣೀ ಸಭೆಗಳನ್ನು ನಡೆಸಲು ಹೊರಟಿರುವ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣದಲ್ಲೇ ಇದನ್ನು ನಿಲ್ಲಿಸುವಂತೆ ತಿಳಿಸಿದ್ದೇನೆ, ಇದರಿಂದ ಪಕ್ಷಕ್ಕೂ ಸಹ ಮುಜುಗರದ ಸನ್ನಿವೇಶ ಸೃಷ್ಟಿ ಮಾಡಲಿದೆ, ಆದ್ದರಿಂದ ನಮ್ಮ ಹಿತೈಷಿಗಳು ಹಾಗೂ ಅಭಿಮಾನಿಗಳು ತಮ್ಮ ಗಮನವನ್ನು ಪಕ್ಷ ಸಂಘಟನೆಯತ್ತ ಕೇಂದ್ರೀಕರಿಸಬೇಕೆ ಹೊರತು, ಸಮಾಜದ ಹೆಸರಿನಲ್ಲಿ ಸಭೆಗಳನ್ನು ಸಂಘಟಿಸುವ ಪ್ರಯತ್ನಗಳನ್ನು ಈ ಕೂಡಲೇ ನಿಲ್ಲಿಸುವಂತೆ ಈ ಮೂಲಕ ವಿನಂತಿಸುವೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4