ಗುಬ್ಬಿ: 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರು ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಪಡಿತರ ತರಲು ತೊಂದರೆಯಾಗುತ್ತಿದ್ದ ಕಾರಣ ಸರ್ಕಾರ ಮನೆಬಾಗಿಲಿಗೆ ಪಡಿತರ ವಿತರಿಸುವ ಅನ್ನ ಸುವಿಧಾ ಯೋಜನೆ ಜಾರಿಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.
ಸೋಮವಾರ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿಯಲ್ಲಿ ಆಹಾರ ಅದಾಲತ್ ಗೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಆರಂಭಿಸಿರುವ ಈ ಯೋಜನೆಯಡಿ 75 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರು ಮಾತ್ರ ಇರುವ ಕುಟುಂಬಗಳಿಗೆ ಸಮೀಪದ ನ್ಯಾಯಬೆಲೆ ಅಂಗಡಿಯವರು ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುತ್ತಾರೆ. ಇದರಿಂದ ಪಡಿತರವನ್ನು ಪಡೆಯಲು ಅಲೆದಾಡುವುದು ತಪ್ಪುತ್ತದೆ ಎಂದು ಹೇಳಿದರು.
75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ಅನುಕೂಲವಾಗುವ ಈ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕಿ ಸೌಮ್ಯಾ ಮಾತನಾಡಿ, 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಈ ಸೌಲಭ್ಯ ಅನ್ವಯವಾಗಲಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ವ್ಯಾಪ್ತಿಯ ಹಿರಿಯ ನಾಗರಿಕರ ಪಟ್ಟಿಯನ್ನು ಜಿಲ್ಲಾಡಳಿತ ಈಗಾಗಲೇ ಸಿದ್ಧಪಡಿಸಿದೆ. ಗುಬ್ಬಿ ತಾಲ್ಲೂಕಿನಲ್ಲಿ 1,197 ಹಿರಿಯ ನಾಗರಿಕರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ಪಡೆಯಲು ಹೋದ ವೇಳೆಯಲ್ಲಿ ಸರ್ವ ದೋಷವಿದೆ ಎಂದು ಪಡಿತರ ವಿತರಿಸಲು ವಿಳಂಬವಾಗುತ್ತಿರುವ ಬಗ್ಗೆ ದೂರು ಬರುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸರಿಪಡಿಸುವುದಾಗಿ ತಿಳಿಸಿದರು.
ತಹಶೀಲ್ದಾರ್ ಆರತಿ ಬಿ. ಮಾತನಾಡಿ, ಈಗಾಗಲೇ ತಾಲ್ಲೂಕಿನಲ್ಲಿ 75 ವರ್ಷ ಮೇಲ್ಪಟ್ಟ ಅರ್ಹ ಹಿರಿಯ ನಾಗರಿಕರನ್ನು ಗುರುತಿಸಲಾಗಿದೆ. ನಿಯಾಮಾನುಸಾರ ಪ್ರತಿ ತಿಂಗಳು ಪಡಿತರ ವಿತರಿಸಲು ಕ್ರಮ ಕೈಗೊಳ್ಳುವಂತೆ ಈಗಾಗಲೇ ಪಡಿತರ ಅಂಗಡಿಗಳಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ನಹಿದಾ ಜಯ್ ಜಮ್ ಹಿರಿಯ ನಾಗರಿಕರ ಮನೆಗಳಿಗೆ ತೆರಳಿ ಪಡಿತರ ವಿತರಿಸಿದರು. ಆಹಾರ ನಿರೀಕ್ಷಕ ಸಿದ್ದೇಗೌಡ, ವೀಣಾ, ಆಹಾರ ಶಿರಸ್ತೇದಾರ್ ಯಶೋಧಮ್ಮ, ಪಿಡಿಒ ಕವಿತಾ, ಪಡಿತರ ವಿತರಕರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


