ಬೆಂಗಳೂರು: “ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಮಾನವೀಯತೆ ಇಲ್ಲದಿದ್ದರೆ ಅದು ನಿಜವಾದ ಶಿಕ್ಷಣವಲ್ಲ, ಅದು ಕೇವಲ ಬದುಕುವ ದಾರಿಯಷ್ಟೇ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ಕನ್ನಡ ಸಾಮರಸ್ಯ ನೆಲೆಗಳು” ಸರಣಿಯ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು. ಕರ್ನಾಟಕದ ಬಹುಮುಖ ಪರಂಪರೆಯನ್ನು ಬಿಂಬಿಸುವ ಈ ಯೋಜನೆಯಡಿ ಒಟ್ಟು 100 ಪುಸ್ತಕಗಳನ್ನು ಹೊರತರಲು ಉದ್ದೇಶಿಸಲಾಗಿದ್ದು, ಇಂದು ಮೊದಲ ಹಂತದಲ್ಲಿ 41 ಪುಸ್ತಕಗಳು ಬಿಡುಗಡೆಯಾದವು. ಉಳಿದ 59 ಪುಸ್ತಕಗಳು ಶೀಘ್ರದಲ್ಲೇ ಲೋಕಾರ್ಪಣೆಯಾಗಲಿವೆ ಎಂದು ಅವರು ತಿಳಿಸಿದರು.
“ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಅವರು ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ಸಂವಿಧಾನ ಜಾರಿಯಾದ ನಂತರ ಸುಧಾರಣೆಯ ವೇಗ ಹೆಚ್ಚಿದೆಯಾದರೂ, ಸಾಮಾಜಿಕ ವ್ಯವಸ್ಥೆ ಇಂದಿಗೂ ಸಂಪೂರ್ಣವಾಗಿ ಬದಲಾಗಿಲ್ಲ. ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ಲಭಿಸಬೇಕು,” ಎಂದು ಸಿಎಂ ಪ್ರತಿಪಾದಿಸಿದರು.
ಬಿಡುಗಡೆಯಾಗಿರುವ ಈ ಪುಸ್ತಕಗಳು ಕೇವಲ ಮುದ್ರಣಕ್ಕೆ ಸೀಮಿತವಾಗದೆ ಯುವಜನರನ್ನು ತಲುಪಬೇಕು. ಯುವಕರಲ್ಲಿ ಮಾನವೀಯತೆ ಮತ್ತು ವೈಚಾರಿಕ ಪ್ರಜ್ಞೆ ಮೂಡಿದಾಗ ಮಾತ್ರ ಈ ಯೋಜನೆಯ ಉದ್ದೇಶ ಸಫಲವಾಗುತ್ತದೆ. ಪಂಪ, ಕನಕದಾಸ, ಬಸವಣ್ಣ ಮತ್ತು ಕುವೆಂಪು ಅವರ ವಿಚಾರಧಾರೆಗಳನ್ನು ಇಂದಿನ ಪೀಳಿಗೆ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದರು.
“ಬಸವಣ್ಣನವರ ‘ಇವ ನಮ್ಮವ’ ಎನ್ನುವ ಭಾವನೆ ಎಲ್ಲರಲ್ಲೂ ಮೂಡಬೇಕು. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಆಶಯಗಳನ್ನು ಸರಿಯಾಗಿ ಅರ್ಥೈಸಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಕುವೆಂಪು ಅವರು ಹೇಳಿದಂತೆ ಗುಡಿ, ಚರ್ಚ್, ಮಸೀದಿಗಳನ್ನು ಬಿಟ್ಟು ಹೊರಬಂದು ಮನುಷ್ಯತ್ವವನ್ನು ಪೂಜಿಸಬೇಕು,” ಎಂದು ಅವರು ಕರೆ ನೀಡಿದರು.
ಭಾರತವು ಅನೇಕ ಭಾಷೆ, ಧರ್ಮ ಮತ್ತು ಸಂಸ್ಕೃತಿಗಳ ಬೀಡಾಗಿದ್ದು, ಕರ್ನಾಟಕದಲ್ಲೂ ಅಂತಹದ್ದೇ ವೈವಿಧ್ಯತೆ ಇದೆ. ಈ ವೈವಿಧ್ಯತೆಯ ನಡುವೆಯೂ ನಾವು ಏಕತೆಯನ್ನು ಸಾಧಿಸಿದ್ದೇವೆ. ಈ ಸಾಮರಸ್ಯದ ನೆಲೆಯನ್ನು ಗಟ್ಟಿಗೊಳಿಸಲು ಇಂತಹ ಸಾಹಿತ್ಯಿಕ ಪ್ರಯತ್ನಗಳು ಪೂರಕವಾಗಿವೆ ಎಂದು ಸಿದ್ದರಾಮಯ್ಯನವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪದಾಧಿಕಾರಿಗಳು, ಸಾಹಿತಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


