ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಇಂದು ನಡೆಯಲಿದ್ದು, 14 ಕ್ಷೇತ್ರಗಳಲ್ಲಿ ನಾಗರೀಕರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಸುಮಾರು 2.9 ಕೋಟಿ ಜನರು ಶುಕ್ರವಾರ 247 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಘಟಾನುಘಟಿಗಳು ಕಣದಲ್ಲಿದ್ದಾರೆ. ಮತದಾರರು ಕೂಡ ತಮ್ಮ ಮತ ನೀಡಿ ನೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾತರರಾಗಿದ್ದಾರೆ. ಇದರ ನಡುವೆ ಮೊದಲ ಹಂತದ ಮತದಾನ ಪ್ರಕ್ರಿಯೆ ವೇಳೆ ನೀವು ಈ 5 ಅಂಶಗಳನ್ನು ಗಮನಿಸಿ.
ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶುಕ್ರವಾರ ನಾಗರೀಕರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಬಿಜೆಪಿ – ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಹೋರಾಟ ನಡೆಯುತ್ತಿದೆ. ಇದರ ನಡುವೆ ಶುಕ್ರವಾರ ನಡೆಯುವ ಲೋಕಸಭಾ ಚುನಾವಣೆ ಒಂದಿಷ್ಟು ಕುತೂಹಲಕಾರಿ ಅಂಶಗಳಿಂದ ಗಮನ ಸೆಳೆದಿವೆ. ಅವುಗಳ ಕುರಿತು ನೋಡೋಣ.
ಕರ್ನಾಟಕದಲ್ಲಿ ಮೂರು ಪ್ರಮುಖ ಪಕ್ಷಗಳಿದ್ದು, ಚುನಾವಣೆಯಲ್ಲಿ ತ್ರಿಕೋನ ಸಮರ ನಡೆಯುತ್ತಿತ್ತು. ಆದರೆ ಈ ಸಲ ಮೈತ್ರಿ ಪಕ್ಷಗಳು ಹಾಗೂ ಏಕ ಪಕ್ಷದ ನಡುವೆ ಕಾಳಗ ನಡೆಯಲಿದೆ. ಅದೂ ಕೂಡ ಎರಡನೇ ಸಲ. ಕಳೆದ ಬಾರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಬಿಜೆಪಿಯನ್ನು ಎದುರಿಸಿದ್ದರೆ, ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಅನ್ನು ಎದುರಿಸುತ್ತಿವೆ
ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ – ಜೆಡಿಎಸ್ ಹಾಗೂ ಕಾಂಗ್ರೆಸ್ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಒಕ್ಕಲಿಗರ ಪ್ರಾಬಲ್ಯ ಇದೆ. 14 ಕ್ಷೇತ್ರಗಳ ಪೈಕಿ ಚಾಮರಾಜನಗರ, ಕೋಲಾರ ಮತ್ತು ಚಿತ್ರದುರ್ಗ ಮೀಸಲು ಕ್ಷೇತ್ರಗಳಾಗಿವೆ. ಉಳಿದ 11 ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಮತ್ತು ಎನ್ಡಿಎ ಎರಡು ಕೂಡ ಒಕ್ಕಲಿಗ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಉಳಿದ 6 ಕ್ಷೇತ್ರಗಳ ಪೈಕಿ ಇಬ್ಬರು ಒಕ್ಕಲಿಗರು ಸ್ಪರ್ಧಿಸಿದ್ದಾರೆ.
20 ವರ್ಷಗಳ ಹಿಂದೆ ಕರ್ನಾಟಕದಿಂದ ಕೊನೆ ಬಾರಿ ಮುಸ್ಲಿಂ ಸಂಸದರೊಬ್ಬರು ಆಯ್ಕೆಯಾಗಿದ್ದರು. ಇದೀಗ 14 ಕ್ಷೇತ್ರಗಳ ಪೈಕಿ ಎನ್ಡಿಎ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಇರುವ ಏಕೈಕ ಮುಸ್ಲಿಂ ಅಭ್ಯರ್ಥಿ ಎಂದರೆ ಅದು ಮನ್ಸೂರ್ ಅಲಿ ಖಾನ್ ಮಾತ್ರ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ದಿಂದ ಕಾಂಗ್ರೆಸ್ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿದೆ.
ಈ ಬಾರಿ 15 ಹಾಲಿ ಸಂಸದರಿಗೆ ಬಿಜೆಪಿ ಕೊಕ್ ನೀಡಿದೆ. ಅದರಲ್ಲೂ ನಾಳೆ ಶುಕ್ರವಾರ ನಡೆಯುವ 14 ಲೋಕಸಭಾ ಕ್ಷೇತ್ರಗಳ ಪೈಕಿ ಎ ನಾರಾಯಣಸ್ವಾಮಿ (ಚಿತ್ರದುರ್ಗ), ಮಾಜಿ ಸಿಎಂ ಡಿವಿ ಸದಾನಂದ ಗೌಡ (ಬೆಂಗಳೂರು ಉತ್ತರ), ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (ದಕ್ಷಿಣ ಕನ್ನಡ), ಮುನಿಸ್ವಾಮಿ (ಕೋಲಾರ), ಪ್ರತಾಪ್ ಸಿಂಹ (ಮೈಸೂರು – ಕೊಡಗು), ಶ್ರೀನಿವಾಸ್ ಪ್ರಸಾದ್ (ಚಾಮರಾಜನಗರ), ಸುಮಲತಾ ಅಂಬರೀಶ್ (ಮಂಡ್ಯ), ಬಿಎನ್ ಬಚ್ಚೇಗೌಡ (ಚಿಕ್ಕಬಳ್ಳಾಪುರ), ಜಿಎಸ್ ಬಸವರಾಜ್ (ತುಮಕೂರು) ಅವರ ಬದಲಿಗೆ ಬೇರೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಅದಲ್ಲದೇ ಒಂದೇ ಕುಟುಂಬದ ಮೂರು ಅಭ್ಯರ್ಥಿಗಳು ಮೊದಲ ಹಂತದಲ್ಲಿ ಕಣದಲ್ಲಿದ್ದಾರೆ. ಮಂಡ್ಯದಲ್ಲಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಜೆಡಿಎಸ್ನಿಂದ ಕಣಕ್ಕಿಳಿದಿದ್ದರೆ. ಬೆಂಗಳೂರು ಗ್ರಾಮಾಂತರದಲ್ಲಿ ಡಾ ಸಿಎನ್ ಮಂಜುನಾಥ್ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಮೂವರು ಕೂಡ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಕುಟುಂಬದವರಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


