ಮಧುಗಿರಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ 2026–27ನೇ ಸಾಲಿನ ಆತ್ಮ ಯೋಜನೆಯಡಿ ಕೃಷಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಕೃಷಿ ಹೊಂಡದ ಫಲಾನುಭವಿಗಳಿಗೆ ಮೀನು ಮರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಕೃಷಿ ಹೊಂಡಗಳನ್ನು ಕೇವಲ ನೀರು ಸಂಗ್ರಹಣೆಗೆ ಸೀಮಿತಗೊಳಿಸದೆ, ಮೀನುಗಾರಿಕೆಯಂತಹ ಪೂರಕ ಚಟುವಟಿಕೆಗಳ ಮೂಲಕ ರೈತರ ಆದಾಯವನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಉದ್ದೇಶ ಎಂದರು. ಇದರಿಂದ ರೈತರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಮತ್ತು ಗ್ರಾಮೀಣ ಆರ್ಥಿಕತೆ ಬಲಗೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಇದೇ ವೇಳೆ ಶಾಸಕರು ತಮ್ಮ ಮಹತ್ವಾಕಾಂಕ್ಷೆಯ “ಅಕ್ಷರ ಅಮೃತ ಯೋಜನೆ”ಯಡಿ ಕಾಲೇಜು ವಿದ್ಯಾರ್ಥಿಗಳಿಗೆ ಊಟ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದರು. ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಆಹಾರದ ಶುಚಿತ್ವ, ಪೌಷ್ಟಿಕತೆ ಹಾಗೂ ಗುಣಮಟ್ಟದ ಬಗ್ಗೆ ನೇರವಾಗಿ ಮಾಹಿತಿ ಪಡೆದರು. ಜೊತೆಗೆ, ಕಾಲೇಜಿಗೆ ತೆರಳಲು ಅಗತ್ಯವಿರುವ ಬಸ್ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು. ಯೋಜನೆಗಳು ಕೇವಲ ಕಾಗದದ ಮೇಲೆ ಇರದೆ, ಫಲಾನುಭವಿಗಳ ಬದುಕಿನಲ್ಲಿ ನೈಜ ಬದಲಾವಣೆ ತರಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.
ಒಟ್ಟಾರೆಯಾಗಿ ರೈತರಿಗೆ ಹೆಚ್ಚುವರಿ ಆದಾಯ ಕಲ್ಪಿಸುವುದು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಆರೋಗ್ಯದ ಹಿತದೃಷ್ಟಿಗೆ ಆದ್ಯತೆ ನೀಡುವುದು ಜನಕೇಂದ್ರಿತ ಅಭಿವೃದ್ಧಿಯ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
