ತುಮಕೂರು/ಗುಬ್ಬಿ: ರಾಜ್ಯದಾದ್ಯಂತ ಸರ್ಕಾರಿ ಜಾಗಗಳನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಸಾವಿರ ನಿವೇಶನಗಳನ್ನು ಸಿದ್ಧಪಡಿಸಿ, ಒಟ್ಟು 15 ಲಕ್ಷ ಬಡ ಕುಟುಂಬಗಳಿಗೆ ಉಚಿತ ನಿವೇಶನ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಗುಬ್ಬಿ ವೀರಣ್ಣ ರಂಗ ಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಆಯೋಜಿಸಿದ್ದ ‘ಪ್ರಜಾ ಸೇವಾ ಅಭಿಯಾನ’ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ತಾಲ್ಲೂಕಿನಲ್ಲಿ ಐದಾರು ಸಾವಿರ ನಿವೇಶನಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಪ್ರಜಾ ಸೇವಾ ಅಭಿಯಾನವನ್ನು ಜಾರಿಗೆ ತರಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲೇ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಅಭಿಯಾನವನ್ನು ಮೂರು ಹಂತಗಳಲ್ಲಿ ನಡೆಸಲಾಗುತ್ತಿದೆ. ಪ್ರತಿ ಮೊದಲ ಹಾಗೂ ಮೂರನೇ ಶನಿವಾರ ತಾವೇ ಒಂದೊಂದು ತಾಲ್ಲೂಕಿಗೆ ಭೇಟಿ ನೀಡಿ ಅಭಿಯಾನ ನಡೆಸಲಿದ್ದು, ಉಳಿದ ವಾರಗಳಲ್ಲಿ ಸ್ಥಳೀಯ ಶಾಸಕರು ಕಾರ್ಯಕ್ರಮ ನಡೆಸಲಿದ್ದಾರೆ. ಮುಂದಿನ ಹಂತದಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೂ ಅಭಿಯಾನ ವಿಸ್ತರಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, 150 ವರ್ಷಗಳಲ್ಲೇ ಇಂತಹ ಬರ ಬಂದಿರಲಿಲ್ಲ. ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ₹329 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ತುಮಕೂರು ಜಿಲ್ಲೆಗೆ ₹14 ಕೋಟಿ ಮೀಸಲಿಡಲಾಗಿದೆ ಎಂದರು.
ರಾಜ್ಯದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿದ್ದು, ಇತರೆ ರಾಜ್ಯಗಳು ಕೂಡ ಕರ್ನಾಟಕದ ಮಾದರಿಯನ್ನು ಅನುಸರಿಸುತ್ತಿವೆ. ಗೃಹಲಕ್ಷ್ಮಿ ಯೋಜನೆ ಬಡ ಮಹಿಳೆಯರ ಸಂಕಷ್ಟಕ್ಕೆ ನೆರವಾಗಿದೆ. ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರು 800 ಕೋಟಿ ಬಾರಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಸರ್ಕಾರದ ಸಾಧನೆಗಳನ್ನು ವಿವರಿಸಿದರು.
ಅಧಿಕಾರಿಗಳು ಆತ್ಮಸಾಕ್ಷಿಗೆ ಹೆದರಿ ಕೆಲಸ ಮಾಡಲಿ: ಶ್ರೀನಿವಾಸ್
ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ, ಪವತಿ ಖಾತೆ, ಕಂದಾಯ ಗ್ರಾಮ ರಚನೆ ಹಾಗೂ ಪೋಡಿಮುಕ್ತ ಗ್ರಾಮ ಸೇರಿದಂತೆ ಕಂದಾಯ ಇಲಾಖೆಯ ಹಲವು ಕಾರ್ಯಕ್ರಮಗಳು ಜಿಲ್ಲೆಯಲ್ಲಿ ಉತ್ತಮವಾಗಿ ಅನುಷ್ಠಾನಗೊಂಡಿವೆ. ನಾಲ್ಕೈದು ದಶಕಗಳಿಂದ ಪವತಿ ಖಾತೆ ಮಾಡಿಸಿಕೊಳ್ಳಲು ಸಾಧ್ಯವಾಗದವರಿಗೆ ಇದೀಗ ಪರಿಹಾರ ದೊರೆತಿದೆ ಎಂದರು.
ನಿತ್ಯ ಜನರ ಮಧ್ಯೆ ಇರುವುದರಿಂದ ಪ್ರತಿದಿನ ನೂರಾರು ಸಮಸ್ಯೆಗಳು ತಮ್ಮ ಗಮನಕ್ಕೆ ಬರುತ್ತವೆ. ಸಾರ್ವಜನಿಕರ ಕೆಲಸ ಮಾಡುವ ಅಧಿಕಾರಿಗಳು ಆತ್ಮಸಾಕ್ಷಿಗೆ ಹೆದರಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಅವರಿಗೂ ನೆಮ್ಮದಿ ಸಿಗಲಿದೆ ಎಂದು ಹೇಳಿದರು.
ಅಭಿಯಾನದಲ್ಲಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಹಲವು ಅರ್ಜಿಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಇತ್ಯರ್ಥಪಡಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಕಾರ್ಯದರ್ಶಿ ದೀಪಾ ಚೋಳನ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತಾಪಂ ಸಿಇಒ ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಹೀದಾ ಜಂಜಂ, ತಹಶೀಲ್ದಾರ್ ಆರತಿ ಬಿ., ತಾಪಂ ಇಒ ರಂಗನಾಥ್ ಹಾಲು ಉತ್ಪಾದಕರ ಸಂಘ ಸದಸ್ಯರು ಮುಖಂಡರಾದ ಚೇತನ್ ಗೌಡ್ರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
