ಬೆಂಗಳೂರು: ರಾಜ್ಯದ ವಸತಿ ರಹಿತರಿಗೆ ಹಾಗೂ ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50,000 ವಸತಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ, ಮುಂಬರುವ ಡಿಸೆಂಬರ್ 31ರ ಒಳಗಾಗಿ ಒಟ್ಟು 5 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ಕಂದಾಯ ಇಲಾಖೆ ಸಜ್ಜಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಈ ಮಹತ್ವದ ಘೋಷಣೆ ಮಾಡಿದರು.
ಸೆಪ್ಟೆಂಬರ್ 15ರೊಳಗೆ ನಿವೇಶನಕ್ಕಾಗಿ ಸೂಕ್ತ ಸರ್ಕಾರಿ ಜಮೀನುಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗುರುತಿಸುವ ಜಮೀನುಗಳಿಗೆ ರಸ್ತೆ ಹಾಗೂ ನೀರಿನ ಸೌಲಭ್ಯವಿರಬೇಕು ಮತ್ತು ಗ್ರಾಮಗಳಿಗೆ ಸಮೀಪವಿರುವ ಜಮೀನುಗಳಿಗೆ ಆದ್ಯತೆ ನೀಡಬೇಕು ಎಂದರು.
ನಿವೇಶನ ಹಂಚಿಕೆಯಲ್ಲಿ ಸಮಾಜದ ದುರ್ಬಲ ವರ್ಗಗಳಿಗೆ ಹೆಚ್ಚಿನ ಮುನ್ನೆಲೆ ನೀಡಲಾಗುವುದು. ಪರಿಶಿಷ್ಟ ಜಾತಿ (SC), ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಅಂಗವಿಕಲರು, ವಿಧವೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ 10,896 ಕಂದಾಯ ಗ್ರಾಮಗಳನ್ನು ಘೋಷಿಸುವ ಗುರಿ ಹೊಂದಲಾಗಿದ್ದು, ಈವರೆಗೆ ಕೇವಲ 3,354 ಗ್ರಾಮಗಳನ್ನು ಮಾತ್ರ ಘೋಷಿಸಿರುವುದಕ್ಕೆ ಡಿಸಿಎಂ ಅಸಮಾಧಾನ ವ್ಯಕ್ತಪಡಿಸಿದರು. ಬಾಕಿ ಇರುವ ಪ್ರಸ್ತಾವನೆಗಳನ್ನು 15 ದಿನಗಳೊಳಗೆ ಪ್ರಾಥಮಿಕ ಅಧಿಸೂಚನೆಗಾಗಿ ಕಳುಹಿಸಬೇಕು ಎಂದು ತಾಕೀತು ಮಾಡಿದರು.
ಈವರೆಗೆ 2.05 ಲಕ್ಷ ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, ಸುಮಾರು 1.55 ಲಕ್ಷ ಹಕ್ಕುಪತ್ರಗಳು ನೋಂದಣಿಯಾಗಿವೆ. ಉಳಿದ ಹಕ್ಕುಪತ್ರಗಳ ನೋಂದಣಿ ಪ್ರಕ್ರಿಯೆಯನ್ನು ಸೆಪ್ಟೆಂಬರ್ 30ರೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ.
10 ಜಿಲ್ಲೆಗಳಲ್ಲಿ ಭೂ ದಾಖಲೆಗಳ ಡಿಜಿಟಲೀಕರಣ ಪೂರ್ಣಗೊಂಡಿದ್ದು, ಇನ್ನೂ 21 ಜಿಲ್ಲೆಗಳಲ್ಲಿ ಬಾಕಿ ಇದೆ. ಒಟ್ಟು 24.43 ಕೋಟಿ ಪುಟಗಳ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಬೇಕಿದೆ. ಅಲ್ಲದೆ, ಬಗೈರ್ ಹುಕುಂ ಅರ್ಜಿಗಳ ವಿಲೇವಾರಿಯನ್ನು (ಸ್ವೀಕೃತವಾದ 14.37 ಲಕ್ಷ ಅರ್ಜಿಗಳಲ್ಲಿ ಬಾಕಿ ಇರುವ ಸುಮಾರು 6.99 ಲಕ್ಷ ಅರ್ಜಿಗಳು) ತ್ವರಿತಗೊಳಿಸುವಂತೆ ತಹಶೀಲ್ದಾರ್ಗಳಿಗೆ ಸೂಚಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
