ತುಮಕೂರು: ಸಮಾಜದ ಎಲ್ಲ ವರ್ಗಗಳೂ ಸಮಾನವಾಗಿ ಬದುಕಬೇಕು, ಉತ್ತಮ ಜೀವನ ರೂಪಿಸಿಕೊಳ್ಳಲೆಂಬ ಉದ್ದೇಶದಿಂದ ಬಡತನ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಡವರ ಪರವಾಗಿ ಕೆಲಸ ಮಾಡಿಕೊಡುವುದು ನಮ್ಮ ಕರ್ತವ್ಯ ಕೂಡ ಎಂದು ಎಂದು ಉಪ ಮುಖ್ಯಮಂತ್ರಿ, ಡಾ.ಜಿ.ಪರಮೇಶ್ವರ ತಿಳಿಸಿದರು.
ಜಿಲ್ಲಾಡಳಿತ, ತುಮಕೂರು ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಾಭಿವೃದ್ಧಿ ಕೋಶದ ವತಿಯಿಂದ ಭಾನುವಾರ ಟೌನ್ಹಾಲ್ ವೃತ್ತದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ತುಮಕೂರು ಜಿಲ್ಲೆ ವಿವಿಧೆಡೆ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ವಸತಿರಹಿತ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು.
ಪ್ರಸ್ತುತ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೇತೃತ್ವದ ಸರ್ಕಾರ ಬಂದಿದೆ. ಈ ಸರ್ಕಾರದ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿ, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವುದಾಗಿದೆ ಎಂದರು.
ಕರ್ನಾಟಕ ಇಡೀ ದೇಶದಲ್ಲೇ 25 ವರ್ಷಗಳಿಗೂ ಮುಂದಿರುವುದನ್ನು ತಾವು ಕಾಣಬಹುದು. ಬೇರೆ ರಾಜ್ಯಗಳನ್ನು ಗಮನಿಸಿದಾಗ ನಮ್ಮದು ಶ್ರೇಯಸ್ಕರ ಸ್ಥಿತಿಯಲ್ಲಿರುವುದನ್ನು ಗಮನಿಸಬಹುದು. ರಾಜ್ಯದಲ್ಲಿ ಶಾಂತಿ, ಅಭಿವೃದ್ಧಿ ಹಾಗೂ ಯುವಕರಿಗೆ ಉದ್ಯೋಗಾವಕಾಶ ಇದು ಉಳಿದ ಎರಡು ವರ್ಷಗಳಲ್ಲಿ ನಮ್ಮ ಆದ್ಯತೆ ಎಂದರು.
209 ಹಕ್ಕುಪತ್ರ: ಸಮಾಜದ ಎಲ್ಲ ಜನರ ರೀತಿ ಅಲೆಮಾರಿ ಸಮುದಾಯದ ಕುಟುಂಬವೂ ಮುಖ್ಯವಾಹಿನಿಗೆ ಬರಬೇಕೆಂಬ ಉದ್ದೇಶದಿಂದ ಅಲೆಮಾರಿ ಸಮುದಾಯದ ಕುಟುಂಬಗಳಿಗೆ 209 ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ರಾಜೀವ್ ಗಾಂಧಿ ವಸತಿ ಯೋಜನೆ ಮೂಲಕ ಮನೆಗಳನ್ನು ಕಟ್ಟಿಸಿಕೊಡಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಅಲೆಮಾರಿ ಸಮುದಾಯ ತಮ್ಮ ಮಕ್ಕಳನ್ನು ಉತ್ತಮ ವಿದ್ಯಾವಂತರನ್ನಾಗಿ ಮಾಡುವ ಮೂಲಕ ಮುಖ್ಯವಾಹಿನಿಗೆ ತರಬೇಕು ಎಂದ ಅವರು, ಇಂತಹ ಕೆಲಸಗಳಿಗೆ ಸರ್ಕಾರ ಹೊಸ ರೂಪ ಕೊಟ್ಟಿದೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ನಿಕೇತ್ ರಾಜ್ ಎಂ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಆಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತ ಶುಭ, ಜಿ.ಪಂ.ಉಪ ಕಾರ್ಯದರ್ಶಿ ಸಂಜೀವಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಸೋನಿಯಾ ವರ್ಣೇಕರ್, ಉಪಸ್ಥಿತರಿದ್ದರು.
ಶಾಸಕ ಸುರೇಶ್ಗೌಡ ಅವರು ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಉತ್ತಮ ಜನಪರ ಕಾರ್ಯಗಳನ್ನು ಮಾಡಿದೆ. ತುಮಕೂರು ಜಿಲ್ಲೆಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಪ್ರಶಂಸನೀಯ. ಅಂತೆಯೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಹೆಜ್ಜೆ ಗುರುತುಗಳು ಇರುವಂತೆ ಕೆಲಸಗಳು ಅವರಿಂದ ಆಗಬೇಕು ಎಂದು ಆಶಿಸಿದರು. ಶಾಸಕ ಜ್ಯೋತಿಗಣೇಶ್ ಅವರು, ತುಮಕೂರು ನಗರ ಭಾಗದ ಕೊಳಗೇರಿ ಪ್ರದೇಶದ ಜನರಿಗೂ ಹಕ್ಕುಪತ್ರಗಳನ್ನು ನೀಡುವಂತಾಗಬೇಕು ಎಂದು ಆಶಿಸಿದರು.
ತುಮಕೂರು ಮಹಾನಗರ ಪಾಲಿಕೆಯ ಈ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ತಮ್ಮ ಸ್ವಂತ ಖರ್ಚಿನಿಂದ ನಿರ್ಮಿಸಲಾಗಿದೆ. ಅಂತೆಯೇ ಇಂದು ಕಾಂಪೌಂಡ್ ಗೋಡೆಗೆ ಶಿಲಾನ್ಯಾಸ ಮಾಡಲಾದ ಡಾ.ಬಾಬು ಜಗಜೀವನರಾಮ್ ಭವನದ ಮುಂಭಾಗ ತಮ್ಮ ಸ್ವಂತ ಖರ್ಚಿನಿಂದ ಜಗಜೀವನರಾಮ್ ಪ್ರತಿಮೆ ನಿರ್ಮಿಸಲಾಗುವುದು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


