ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಂಡಿಸಿದ್ದ ಬಹುಚರ್ಚಿತ ‘ದ್ವೇಷ ಭಾಷಣ ಮಸೂದೆ’ (Hate Speech Bill) ಈಗ ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿದೆ. ಮಸೂದೆಗೆ ಸಹಿ ಹಾಕಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದು, ಈ ನಿರ್ಧಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 29 ಪ್ರಮುಖ ಕಾರಣಗಳನ್ನು ಉಲ್ಲೇಖಿಸಿದ್ದಾರೆ.
ಅಸ್ಪಷ್ಟ ವ್ಯಾಖ್ಯಾನ: ಮಸೂದೆಯಲ್ಲಿ ‘ದ್ವೇಷ ಭಾಷಣ’ ಎಂಬ ಪದದ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಇದರಿಂದ ಧರ್ಮ, ಜಾತಿ ಅಥವಾ ವ್ಯಕ್ತಿಗಳ ಮೇಲೆ ಪೂರ್ವಾಗ್ರಹ ಪೀಡಿತ ಕ್ರಮ ಜರುಗುವ ಸಾಧ್ಯತೆ ಇದೆ ಎಂದು ರಾಜ್ಯಪಾಲರು ಆತಂಕ ವ್ಯಕ್ತಪಡಿಸಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಮಸೂದೆಯು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ಭೀತಿ ಇದೆ. ಪ್ರಜಾಪ್ರಭುತ್ವದ ಮುಕ್ತ ಚರ್ಚೆಗಳಿಗೆ ಇದು ಅಡ್ಡಿಯಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅಸಮರ್ಪಕ ಚರ್ಚೆ: ಉಭಯ ಸದನಗಳಲ್ಲಿ (ವಿಧಾನಸಭೆ ಮತ್ತು ವಿಧಾನ ಪರಿಷತ್ತು) ಈ ಮಸೂದೆಯ ಬಗ್ಗೆ ಸಮರ್ಪಕ ಮತ್ತು ಅರ್ಥಪೂರ್ಣ ಚರ್ಚೆ ನಡೆಯದೆ ಅಂಗೀಕರಿಸಲಾಗಿದೆ ಎಂದು ರಾಜ್ಯಪಾಲರು ಆಕ್ಷೇಪಿಸಿದ್ದಾರೆ.
ದುರುಪಯೋಗದ ಭೀತಿ: ಆನ್’ಲೈನ್ ವಿಷಯಗಳನ್ನು ಅನಿಯಂತ್ರಿತವಾಗಿ ನಿರ್ಬಂಧಿಸುವ ಮತ್ತು ಪೊಲೀಸ್ ವ್ಯವಸ್ಥೆಯಿಂದ ಈ ಕಾನೂನು ದುರುಪಯೋಗವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಅಸ್ತಿತ್ವದಲ್ಲಿರುವ ಕಾನೂನುಗಳು: ದೇಶದಲ್ಲಿ ಈಗಾಗಲೇ ದ್ವೇಷ ಭಾಷಣ ನಿಯಂತ್ರಿಸಲು ಸಾಕಷ್ಟು ಕಾನೂನುಗಳಿರುವಾಗ, ಹೊಸ ಕಾನೂನಿನ ಅಗತ್ಯತೆ ಮತ್ತು ಅದರ ಪರಿಣಾಮಗಳ ಬಗ್ಗೆ ರಾಜ್ಯಪಾಲರು ಪ್ರಶ್ನಿಸಿದ್ದಾರೆ.
ರಾಜಕೀಯ ಸಂಘರ್ಷಕ್ಕೆ ನಾಂದಿ: ಈ ಮಸೂದೆಯ ವಿರುದ್ಧ ಈಗಾಗಲೇ 40ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ಈಗ ರಾಜ್ಯಪಾಲರು ಇದನ್ನು ರಾಷ್ಟ್ರಪತಿಗಳಿಗೆ ವರ್ಗಾಯಿಸಿರುವುದು ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಸಂಘರ್ಷವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ. ಬೌದ್ಧಿಕ ಚಿಂತನೆಗೆ ಹೆಸರಾದ ಕರ್ನಾಟಕದಲ್ಲಿ ಇಂತಹ ಕಾನೂನು ಚಿಂತನೆಗಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಬಹುದು ಎಂದು ರಾಜ್ಯಪಾಲರು ಹೇಳಿದ್ದಾರೆ.
ಈಗ ಚೆಂಡು ರಾಷ್ಟ್ರಪತಿಗಳ ಅಂಗಳದಲ್ಲಿದ್ದು, ಕೇಂದ್ರ ಸರ್ಕಾರ ಮತ್ತು ರಾಷ್ಟ್ರಪತಿಗಳು ಈ ಮಸೂದೆಯ ಬಗ್ಗೆ ಯಾವ ನಿಲುವು ತಳೆಯುತ್ತಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


