ತುಮಕೂರು: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಇವರ ನೇತೃತ್ವದಲ್ಲಿ ನಾಳೆ ನಡೆಯಲಿರುವ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಇಂದು ಪೊಲೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ತುಮಕೂರು ನಗರದಾದ್ಯಂತ ಪಥ ಸಂಚಲನ ನಡೆಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರ ನೇತೃತ್ವದಲ್ಲಿ ಪಥ ಸಂಚಲನ ನಡೆಸಲಾಯಿತು.
ನಗರದ ಬಿ.ಜಿ.ಎಸ್. ವೃತ್ತದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿರುವ 7ನೇ ವರ್ಷದ ಹಿಂದೂ ಮಹಾಗಣಪತಿಯ ಅದ್ದೂರಿ ಮಹೋತ್ಸವ ಸೆ.21 ರಂದು ನಡೆಯಲಿದೆ.
ಮೆರವಣಿಗೆ ಯಾತ್ರೆಯು ನಗರದ ಬಿಜಿಎಸ್ ವೃತ್ತದಿಂದ ಆರಂಭಗೊಂಡು ಲಕ್ಕಪ್ಪ ವೃತ್ತ, ಜೆ.ಸಿ. ರಸ್ತೆ, ಬಂಡಿಪೇಟೆ ವೃತ್ತ, ಸ್ವತಂತ್ರ ಚೌಕ, ಅಶೋಕ ರಸ್ತೆ, ಬಿಜಿಎಸ್ ವೃತ್ತ, ಎಂಜಿ ರಸ್ತೆ, ಜೈನ್ ಟೆಂಪಲ್ ರಸ್ತೆ, ರಾಮಪ್ಪ ವೃತ್ತ, ಡಾ. ಬಿ ಆರ್ ಅಂಬೇಡ್ಕರ್ ರಸ್ತೆ, ಕೋಟೆ ಆಂಜನೇಯಸ್ವಾಮಿ ವೃತ್ತ, ಗಾರ್ಡನ್ ರಸ್ತೆ ಮುಖೇನ ಸಾಗಿ ಕೆ.ಎನ್.ಎಸ್. ಕಲ್ಯಾಣಿಯಲ್ಲಿ ಗಣೇಶಮೂರ್ತಿಯನ್ನು ವಿಸರ್ಜಿಸಲಾಗುವುದು.
ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳಾದ ನಂದಿ ಧ್ವಜ, ನಾಸಿಕ್ ಡೋಲ್, ವೀರಗಾಸೆ, ಡಂಕವಾದ್ಯ, ತಮಟೆ ವಾದ್ಯ ಪಾಲ್ಗೊಳ್ಳಲಿವೆ. ಗಣೇಶಮೂರ್ತಿ ಮೆರವಣಿಗೆ ಸಾಗುವ ಪ್ರಮುಖ ವೃತ್ತಗಳಲ್ಲಿ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ.
ಈ ಬಾರಿಯ ಮೆರವಣಿಗೆಯ ಪ್ರಮುಖ ಆಕರ್ಷಣೆ ರಾಧೆ ಕೃಷ್ಣ ಕೋಲಾಟ ಜಟಾಯು ನಾಸಿಕ್ ಡೋಲ್ ವೀರ ಸಾವರ್ಕರ್ ಪ್ರತಿಮೆ, ಛತ್ರಪತಿ ಶಿವಾಜಿ ಮಹಾರಾಜ್, ವಾಯುಪುತ್ರ ಆಂಜನೇಯ ಟ್ಯಾಬ್ಲೋ ಕಲ್ಲಡ್ಕರಿಂದ ಮತ್ತು ಇತರೆ ಜಾನಪದ ಕಲಾ ತಂಡಗಳೊಂದಿಗೆ ಜರುಗಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕಾರ್ಯದರ್ಶಿಗಳಾದ ಜಿ.ಕೆ. ಶ್ರೀನಿವಾಸ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q