ತುಮಕೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತಮಗೆ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈತಪ್ಪಿರುವ ಕುರಿತು ಅತ್ಯಂತ ಭಾವುಕರಾಗಿ ತಮ್ಮ ಮನದ ನೋವನ್ನು ತೋಡಿಕೊಂಡಿದ್ದಾರೆ. ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗುವುದು ತಮ್ಮ ಬಹುಕಾಲದ ಕನಸಾಗಿದ್ದರೂ, ರಾಜಕೀಯ ಸನ್ನಿವೇಶಗಳಿಂದಾಗಿ ಅದು ಹೇಗೆ ಕೈಗೂಡಲಿಲ್ಲ ಎಂಬುದನ್ನು ನೆನೆದು ಬೇಸರ ವ್ಯಕ್ತಪಡಿಸಿದ್ದಾರೆ.
“2013ರ ಚುನಾವಣೆಯಲ್ಲಿ ನಾನು ಸೋತಿದ್ದರಿಂದ ಮುಖ್ಯಮಂತ್ರಿ ಹುದ್ದೆ ಕೈತಪ್ಪಿತು. ಅಂದು ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುತ್ತಿರಲಿಲ್ಲ” ಎಂದು ಪರಮೇಶ್ವರ್ ಹಳೆಯ ನೆನಪನ್ನು ಹಂಚಿಕೊಂಡಿದ್ದಾರೆ.
“2018ರಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದರೂ ಮೈತ್ರಿ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರು. ಅವತ್ತು ನನ್ನನ್ನೂ ಮುಖ್ಯಮಂತ್ರಿ ಮಾಡಬಹುದಿತ್ತು, ಆದರೆ ಆ ಅವಕಾಶ ಸಿಗಲಿಲ್ಲ” ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ರಾಜಕೀಯ ವಿದ್ಯಮಾನಗಳಲ್ಲೂ ತಮಗೆ ಸಿಎಂ ಹುದ್ದೆಯ ನಿರೀಕ್ಷೆ ಇತ್ತು, ಆದರೆ ವಿವಿಧ ರಾಜಕೀಯ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಹೈಕಮಾಂಡ್ ಜತೆಗಿನ ಚರ್ಚೆಯನ್ನು ಸ್ಮರಿಸಿದ ಪರಮೇಶ್ವರ್ ಅವರು, “ನನಗೆ ಸಂಸ್ಥೆಯ ಶ್ರೇಯೋಭಿವೃದ್ಧಿ ಮುಖ್ಯ. ಕೊಡಲು ಸಾಧ್ಯವಿಲ್ಲ ಅಂದರೆ ನೇರವಾಗಿಯೇ ಹೇಳಿ, ನನಗೆ ಬಹಳ ದೊಡ್ಡ ಕೆಲಸಗಳಿವೆ, ನಾನು ವಾಪಸ್ ಹೋಗ್ತೀನಿ ಎಂದು ಹೇಳಿದ್ದೆ. ಕೊನೆಗೆ ಪಕ್ಷ ನನಗೆ ಉಪಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿ ನೀಡಿದೆ” ಎಂದಿದ್ದಾರೆ.
ಸದ್ಯ ತಮಗೆ ಸಿಕ್ಕಿರುವ ಉಪಮುಖ್ಯಮಂತ್ರಿ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ನಿಭಾಯಿಸುವುದಾಗಿ ಹೇಳಿದ ಅವರು, “ಜನರು ನಮ್ಮನ್ನು ಸೂಕ್ಷ್ಮವಾಗಿ ನೋಡುತ್ತಾರೆ. ಆದ್ದರಿಂದ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳುತ್ತೇನೆ” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಸರ್ಕಾರದಲ್ಲಿ ಯಾವುದೇ ಕುಂದುಬರದಂತೆ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಜನರ ನಿರೀಕ್ಷೆಗಳನ್ನು ಪೂರೈಸಲು ಶ್ರಮಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


