ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಅಕ್ರಮ ಡಿನೋಟಿಫಿಕೇಷನ್ ಆಗಿದೆ ಎಂದು ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್ ದಾಖಲೆ ಬಿಡುಗಡೆ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ರಾಜ್ಯಪಾಲರು ಕೆಲವು ಪ್ರಕರಣಗಳಲ್ಲಿ ವಿಳಂಬ ಮಾಡುತ್ತಿದ್ದಾರೆ. ತಪ್ಪು ಮಾಡಿದವರಿಗೆ ಅವರು ರಕ್ಷಣೆಗೆ ನಿಂತಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಅಕ್ರಮ ಒಂದೆರಡಲ್ಲ, ಹಲವಾರು ಇವೆ. ಈಗ ಮತ್ತೊಂದು ದಾಖಲೆ ಇದೆ. ಆಸ್ತಿ ಇರುವುದು ಮಠದಹಳ್ಳಿ ಗಂಗೇನಹಳ್ಳಿ ಬಡಾವಣೆ 7/1ಬಿ, ಸಿ ಹಾಗೂ ಡಿ ಸರ್ವೆ ನಂಬರ್ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧೀನಗೊಂಡಿದ್ದು, ಇದನ್ನು ಡಿನೋಟಿಫೈ ಮಾಡಬೇಕೆಂದು ದಾರಿಯಲ್ಲಿ ಹೋಗುವ ಯಾರೋ ದಾಸಯ್ಯ ಜಮೀನಿಗೆ ಸಂಬಂಧವೇ ಇಲ್ಲದ ರಾಜಶೇಖರಯ್ಯ ಅನ್ನುವವರು ಅರ್ಜಿ ಕೊಡ್ತಾರೆ. 2007 ರಲ್ಲಿ ಅರ್ಜಿ ಬಂದ ಅದೇ ದಿನ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ಡಿನೋಟಿಫೈ ಮಾಡಲು ಸೂಚಿಸುತ್ತಾರೆ ಎಂದು ಗಂಭೀರ ಆರೋಪಿಸಿದ್ದಾರೆ.
ಜಮೀನಿನ ಅಸಲಿ ಮಾಲೀಕರು 21 ಜನರಿದ್ದಾರೆ. 30 ವರ್ಷಗಳ ಹಿಂದೆಯೇ ಈ ಜಮೀನು ಭೂಸ್ವಾಧೀನ ಆಗಿತ್ತು. ಯಾವುದು ಭೂಸ್ವಾಧೀನ ಆಗಿತ್ತೋ ಆ ಜಮೀನಿಗೆ ಕುಮಾರಸ್ವಾಮಿ ಅತ್ತೆ ಹೆಸರಿಗೆ ಜಿಪಿಎ ಮಾಡಿಕೊಳ್ಳುತ್ತಾರೆ. ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಫೈಲ್ ತಿರಸ್ಕಾರ ಮಾಡುತ್ತಾರೆ. ಆದರೂ ಅಂದಿನ ಸಿಎಂ ಕುಮಾರಸ್ವಾಮಿ ಡಿನೋಟಿಫೈ ಮಾಡುವಂತೆ ಸೂಚಿಸುತ್ತಾರೆ. ಬಳಿಕ ಸರ್ಕಾರ ಬದಲಾಗಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ. ಆಗ ಮತ್ತೆ ಅದೇ ಫೈಲ್ ಸಿಎಂ ಯಡಿಯೂರಪ್ಪ ಕೈಗೆ ಬರುತ್ತದೆ. ಕಾನೂನು ಗಾಳಿಗೆ ತೂರಿ ಯಡಿಯೂರಪ್ಪ 2009-10 ರಲ್ಲಿ ಭೂಸ್ವಾಧೀನದಿಂದ ಕೈ ಬಿಡುತ್ತಾರೆ ಎಂದು ಹೇಳಿದರು.
ಡಿನೋಟಿಫಿಕೇಷನ್ ಆದ ಒಂದೇ ತಿಂಗಳಿಗೆ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವರಿಗೆ ಶುದ್ಧ ಕ್ರಯಪತ್ರ ಆಗುತ್ತದೆ. ಹೀಗೆ ಅಕ್ರಮವಾಗಿ ಡಿನೋಟಿಫೈ ಆದ ಜಮೀನು ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದೆ. ಇದು ವ್ಯವಸ್ಥಿತ ವಂಚನೆ ಅಲ್ಲವೇ? ಎಂದು ಅವರು ಪ್ರಶ್ನಿಸಿದರು.
ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಾಗಿ 9 ವರ್ಷಗಳಾಗಿವೆ. ಹೈಕೋರ್ಟ್ ತನಿಖೆಗೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನಿದೆ ಎಂದು ಅವರು ಪ್ರಶ್ನಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296