ತಿಪಟೂರು: ಭಾರತ ಕ್ರೀಡಾ ಕ್ಷೇತ್ರ ಸೇರಿದಂತೆ, ಎಲ್ಲಾ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡುತ್ತಿದೆ. 2030ರಲ್ಲಿ ಒಲಿಂಪಿಕ್ಸ್ ಗೆ ಆತಿಥ್ಯ ವಹಿಸಲು ಭಾರತ ಸಮರ್ಥವಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ನಗರದ ಕೆವಿಎಸ್ ಕ್ರೀಡಾಂಗಣದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಮತ್ತು ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಜಂಟಿ ನೇತೃತ್ವದಲ್ಲಿ ಆಯೋಜಿಸಿರುವ ವಿಟಿಯು ರಾಜ್ಯ ಮಟ್ಟದ 27ನೇ ಅಂತರ ಮಹಾವಿದ್ಯಾಲಯ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಿಪಟೂರಿನಲ್ಲಿ ನಡೆಯುತ್ತಿರುವ ಈ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ಕಲ್ಪತರು ನಾಡಿಗೆ ಕೀರ್ತಿಯ ವಿಷಯವಾಗಿದೆ ಎಂದರು.
1961ರಲ್ಲಿ ಸ್ಥಾಪಿತವಾದ ಈ ವಿದ್ಯಾ ಸಂಸ್ಥೆ ಗ್ರಾಮೀಣ ಭಾಗದ ಮಧ್ಯಮ ವರ್ಗದ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿರುವ ಹೆಗ್ಗಳಿಕೆಯನ್ನು ಹೊಂದಿದೆ. ದೇಶದ ಪ್ರಧಾನ ಮಂತ್ರಿಗಳು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, 2030ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ದೇಶದಲ್ಲಿ ಆಯೋಜಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಆ ವೇಳೆಗೆ ದೇಶ ಮತ್ತು ರಾಜ್ಯದ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸುವ ದೃಷ್ಟಿಯಿಂದ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿದೆ ಎಂದರು.
ಕ್ರೀಡಾಕೂಟದಲ್ಲಿ 142 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಷಯ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 11 ವರ್ಷದ ಆಡಳಿತಾವಧಿಯಲ್ಲಿ ಗ್ರಾಮೀಣ ಜನರ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವ ಮೂಲಕ, ಜನರು ಆರೋಗ್ಯಕರ ಜೀವನ ನಡೆಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ರೈಲ್ವೆ ಇಲಾಖೆಯಲ್ಲಿ ಜಾತಿ, ಧರ್ಮ ಭೇದ ಭಾವವಿಲ್ಲದೆ, ಶಿಕ್ಷಣದ ಆಧಾರದ ಮೇಲೆ ತಿಂಗಳಿಗೆ 20ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಲಾಗುತ್ತಿದೆ. ಅಲ್ಲದೆ ಕ್ರೀಡೆಗಳಲ್ಲಿ ಭಾಗವಹಿಸಲು ಯುವಕರಿಗೆ ಉತ್ತೇಜನ ನೀಡಲಾಗುತ್ತಿದೆ. 2047ರ ವಿಕಸಿತ ಭಾರತದ ಗುರಿ ಸಾಧನೆಗೆ ದೇಶದ ಜನರು ದೃಢಸಂಕಲ್ಪ ಮಾಡಬೇಕಾಗಿದೆ. ಜಿಲ್ಲೆಯ ತಿಪಟೂರು ಮತ್ತು ಮಧುಗಿರಿ ತಾಲೂಕುಗಳು ಜಿಲ್ಲಾ ಕೇಂದ್ರಗಳಾಗುವ ಅರ್ಹತೆಯನ್ನು ಹೊಂದಿದ್ದು, ಅಭಿವೃದ್ಧಿಯ ಆಧಾರದ ಮೇಲೆ ಜಿಲ್ಲೆಗಳಾಗಿ ರೂಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ತಿಪಟೂರು ಅಭಿವೃದ್ಧಿಗೆ ಶಾಸಕ ಕೆ.ಷಡಕ್ಷರಿ ಹಾಗೂ ಮಾಜಿ ಸಚಿವ ಬಿ.ಸಿ. ನಾಗೇಶ್ ಸಾಕಷ್ಟು ಶ್ರಮ ವಹಿಸಿದ್ದಾರೆ. ಮುಂದಿನ 15 ದಿನಗಳಲ್ಲಿ ಅರಸೀಕೆರೆ-ಬೆಂಗಳೂರು ನಡುವೆ ಮೆಮೋ ರೈಲು ಸಂಚಾರ ಆರಂಭವಾಗಲಿದ್ದು, ಉದ್ಘಾಟನೆಗೆ ಆಗಮಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಗೂ ಮುನ್ನ ನಗರದ ಶ್ರೀ ಕೆಂಪಮ್ಮ ದೇವಾಲಯದ ಆವರಣದಿಂದ, ಕಾಲೇಜಿನ ಕ್ರೀಡಾಂಗಣದವರೆಗೆ ವಿವಿಧ ಸಾಂಸ್ಕೃತಿಕ ಮತ್ತು ಜಾನಪದ ಕಲಾತಂಡಗಳೊಂದಿಗೆ ಕ್ರೀಡಾ ಜ್ಯೋತಿ ಮೆರವಣಿಗೆ ಸಾಗಿ, ನೂರಾರು ವಿದ್ಯಾರ್ಥಿಗಳು ಮತ್ತು ಕ್ರೀಡಾಭಿಮಾನಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ 142 ಕಾಲೇಜುಗಳ 2000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಬೆಳಿಗ್ಗೆ 6:00ಯಿಂದ ಸ್ಪರ್ಧೆಗಳು ಆರಂಭಗೊಂಡಿದ್ದು, ಮೊದಲ ದಿನವೇ 5000 ಮೀಟರ್ ಓಟ, ಎತ್ತರ ಜಿಗಿತ ಹಾಗೂ ಡಿಸ್ಕಸ್ ಥ್ರೋ ಸೇರಿದಂತೆ ಹಲವು ಸ್ಪರ್ಧೆಗಳು ನಡೆದವು ಎಂದರು.
ಕಾರ್ಯಕ್ರಮದಲ್ಲಿ ವಿಟಿಯು ಕುಲಪತಿ ಡಾ. ಎಸ್.ವಿದ್ಯಾಶಂಕರ್, ಯುವಜನ ಕ್ರೀಡಾ ಇಲಾಖೆಯ ಆಯುಕ್ತ ಆರ್.ಚೇತನ್, ತಹಶೀಲ್ದಾರ್ ಹರ್ಷನ್ ಕುಮಾರ್, ಕಲ್ಪತರು ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ, ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಬೆಂಗಳೂರು ಪ್ರಾಂಶುಪಾಲ ಡಾ. ಎನ್.ಬಿ.ಭಾಗ್ಯಶ್ರೀ, ಅಂತರರಾಷ್ಟ್ರೀಯ ಕ್ರೀಡಾಪಟು ನಿರ್ಮಲ್ ಜೋಯಲ್, ದೈಹಿಕ ಶಿಕ್ಷಣ ನಿರ್ದೇಶಕ ಜಯಂತ್, ವಿದ್ಯಾ ಸಂಸ್ಥೆ ಉಪಾಧ್ಯಕ್ಷರಾದ ಬಾಗೇಪಲ್ಲಿ ನಟರಾಜು, ಬಸವರಾಜು, ಉಮೇಶ್, ದೀಪಕ್ ಕಾರ್ಯದರ್ಶಿಗಳಾದ ಉಮಾನಂಕರ್, ಗಂಗಾಧರ್, ಜಗದೀಶಮೂರ್ತಿ, ಸುಧಾಕರ್, ಖಜಾಂಚಿ ಶಿವಪ್ರಸಾದ್ ಮತ್ತು ಪ್ರಾಂಶುಪಾಲ ಸತೀಶ್ ಕುಮಾರ್ ಸೇರಿದಂತೆ ಅಧಿಕಾರಿಗಳು, ಕಾಲೇಜಿನ ಬೋಧಕ ವೃಂದ, ಸಿಬ್ಬಂದಿ ಹಾಗೂ ಸಾವಿರಾರು ಕ್ರೀಡಾಪಟುಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


