ಔರಾದ್: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವರು ಹಾಗೂ ಔರಾದ್ ಶಾಸಕರಾದ ಪ್ರಭು ಚವ್ಹಾಣ ಕರೆ ನೀಡಿದರು.
ಔರಾದ್ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ‘ಕನ್ನಡ ಜಂಗಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನರ ಕುಂದುಕೊರತೆಗಳು, ಶಿಕ್ಷಣ, ನೀರಾವರಿ, ಕೃಷಿ ಹಾಗೂ ಕಾರ್ಮಿಕರ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ಕೆಲಸ ಮಾಧ್ಯಮಗಳಿಂದ ಆಗಬೇಕಿದ್ದು, ತಾಲೂಕಿನ ಅಭಿವೃದ್ಧಿಯಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.

ಅಲ್ಲದೆ, ತಾಲೂಕಿನಲ್ಲಿ ಪತ್ರಕರ್ತರ ಅನುಕೂಲಕ್ಕಾಗಿ ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ದೊರೆತರೆ, ಭವ್ಯ ಕಟ್ಟಡ ನಿರ್ಮಿಸಲು ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗ ದೇವರು ಮಾತನಾಡಿ, ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದು, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿ ಆಡಳಿತ ವ್ಯವಸ್ಥೆಯನ್ನು ಎಚ್ಚರಿಸುವ ಕೆಲಸ ಮಾಧ್ಯಮಗಳಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು. ಪ್ರತಿಯೊಬ್ಬರೂ ದಿನಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಂಡರೆ ಜ್ಞಾನ ವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಮೂರು ದಶಕಗಳಿಗೂ ಅಧಿಕ ಕಾಲ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿದ ಕಲಬುರಗಿ ವಿಭಾಗದ ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ ಸ್ಮರಣಾರ್ಥ ರಾಜ್ಯ ಮಟ್ಟದ ‘ಕನ್ನಡ ಜಂಗಮ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ವಿಶೇಷ ಉಪನ್ಯಾಸ ನೀಡಿದ ಬಾಬುರಾವ ಯಡ್ರಾಮಿ ಅವರು, ಪತ್ರಕರ್ತರು ಅರೆಬರೆ ಅಥವಾ ಪರಿಶೀಲಿಸದ ಸುದ್ದಿಗಳನ್ನು ಪ್ರಕಟಿಸದೆ, ಸತ್ಯ ಮತ್ತು ನಿಖರತೆಗೆ ಆದ್ಯತೆ ನೀಡಬೇಕು ಎಂದರು. ವೈಯಕ್ತಿಕ ವಿಚಾರಗಳಿಗಿಂತ ಸಾರ್ವಜನಿಕ ಹಿತಾಸಕ್ತಿ ಹಾಗೂ ಜನರ ಸಮಸ್ಯೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಆಡಳಿತ ವ್ಯವಸ್ಥೆಯನ್ನು ಸರಿದಾರಿಗೆ ತರುವ ಜವಾಬ್ದಾರಿಯುತ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವೆ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳ ಪಾತ್ರ ಅನನ್ಯವಾಗಿತ್ತು. ಗಡಿಭಾಗದಲ್ಲಿ ಅನ್ಯ ಭಾಷೆಗಳ ಪ್ರಭಾವ ಹೆಚ್ಚಿರುವುದರಿಂದ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯೂ ಪತ್ರಕರ್ತರ ಮೇಲಿದೆ ಎಂದರು. ಊಹಾಪೋಹಗಳಿಗೆ ಆಸ್ಪದ ನೀಡದೆ ಪ್ರಾಮಾಣಿಕ ಹಾಗೂ ವಸ್ತುನಿಷ್ಠ ಸುದ್ದಿಗಳನ್ನು ತಲುಪಿಸುವಂತೆ ಮನವಿ ಮಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಅಧ್ಯಕ್ಷತೆ ವಹಿಸಿ, ಗ್ರಾಮೀಣ ಪತ್ರಕರ್ತರ ಹಿತರಕ್ಷಣೆಗೆ ಸಂಘವು ಬದ್ಧವಾಗಿದ್ದು ಶೀಘ್ರದಲ್ಲೇ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದರು. ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಹೇಶ್ ಪಾಟೀಲ್, ತಾಲೂಕು ಪಂಚಾಯಿತಿ ಇಒ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಸಂಘದ ಕಾರ್ಯದರ್ಶಿ ಅನಿಲಕುಮಾರ ದೇಶಮುಖ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕಿನ ಪತ್ರಕರ್ತರು ಉಪಸ್ಥಿತರಿದ್ದರು. ಮಲ್ಲಪ್ಪ ಗೌಡಾ ಸ್ವಾಗತಿಸಿದರೆ, ರಿಯಾಜಪಾಶಾ ಕೊಳ್ಳೂರು ನಿರೂಪಿಸಿ, ಮನ್ಮಥ ಸ್ವಾಮಿ ವಂದಿಸಿದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
