ಪಾವಗಡ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಕರ್ನಾಟಕ ರಾಜ್ಯದ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತಾಲ್ಲೂಕು ಕಸಬಾ ಹೋಬಳಿಯ ಕನ್ನಮೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಗಿರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶ್ರೀ ಭಗತ್ ಸಿಂಗ್ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ನಡೆಸಲಾಯಿತು. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕೃಷ್ಣಗಿರಿ ಜೂಲಪ್ಪನಹಟ್ಟಿ, ಆಲದಮರದ ಹಟ್ಟಿ, ಗ್ರಾಮಗಳ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಶಿಬಿರದ ಸದುಪಯೋಗ ಪಡೆದುಕೊಂಡರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಮಿಕ ನಿರೀಕ್ಷಕ ಶ್ರೀ ಅಬ್ದುಲ್ ರವೂಫ್, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಗಾಳಿ-ಮಳೆ ಧೂಳಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವರ ಆರೋಗ್ಯದ ರಕ್ಷಣೆಗಾಗಿ ಸರ್ಕಾರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದುಡಿದು ಸಂಸಾರವನ್ನು ನಿರ್ವಹಿಸುವಂತಹ ಕಾರ್ಮಿಕ ಅನಾರೋಗ್ಯಕ್ಕೆ ತುತ್ತಾದರೆ ಕುಟುಂಬವು ಕಷ್ಟಕ್ಕೆ ತುತ್ತಾಗುತ್ತಾರೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಂಡು ಸರಿಯಾದ ಸಮಯಕ್ಕೆ ಚಿಕಿತ್ಸೆಯನ್ನು ಪಡೆದುಕೊಂಡರೆ ಆರೋಗ್ಯ ಚೆನ್ನಾಗಿರುತ್ತದೆ. ಹಾಗಾಗಿ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರು ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮವನ್ನು ಕುರಿತು ಭಗತ್ ಸಿಂಗ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಗೌಡ ರಂಗಪ್ಪ ಮಾತನಾಡಿ, ಈಗಾಗಲೇ ನೋಂದಾಯಿತ ಕಾರ್ಮಿಕರಿಗೆ ಹಲವಾರು ಸೌಲಭ್ಯಗಳು ಸಿಗುತ್ತಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ಧನಸಹಾಯ, ವಿವಾಹ ಧನಸಹಾಯ, ಪ್ರಮುಖ ಕಾಯಿಲೆಗೆ ಎರಡು ಲಕ್ಷದವರೆಗೆ ಧನಸಹಾಯ, ನಿವೃತ್ತಿ ಆದವರಿಗೆ 2,000 ಪಿಂಚಣಿ. ಹೆರಿಗೆ ಧನಸಹಾಯ, ಇನ್ನಿತರ ಸೌಲಭ್ಯ ಸಿಗುತ್ತಿದೆ. ಮುಂದುವರಿದ ಭಾಗವಾಗಿ ಎಲ್ಲ ಕಟ್ಟಡ ಕಾರ್ಮಿಕರು ಮತ್ತು ಅವಲಂಬಿತ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವೀರ್ಲಗೊಂದಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕನ್ನಮೆಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಗಿರಿಜಮ್ಮ, ಬೋರಣ್ಣ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದಂತಹ ಕೃಷ್ಣಗಿರಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್ ಅವರು ಮಾತನಾಡಿ ಕಟ್ಟಡ ಕಾರ್ಮಿಕರು ಕೆಲಸ ನಿರ್ವಹಿಸುತ್ತಾರೆ ಕುಟುಂಬದ ಸದಸ್ಯರು ಅನಾರೋಗ್ಯಕ್ಕೆ ತುತ್ತಾದರೆ ಇಡೀ ಕುಟುಂಬ ಕಣ್ಣೀರ್ ಹಾಕಬೇಕಾಗುತ್ತದೆ ದಯವಿಟ್ಟು ಎಲ್ಲರೂ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ. ಭಗತ್ ಸಿಂಗ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷರಾದ ಸಿದ್ದಪ್ಪ, ಗ್ರಾಮ ಪಂಚಾಯತಿ ಸದಸ್ಯರಾದ ವಸಂತ ಸಿದ್ಧಾರ್ಥ ಕಟ್ಟಡ ಕಾರ್ಮಿಕರ ಸಂಘಟನೆಯ ಅಧ್ಯಕ್ಷರಾದ ಗಿರಿಸ್ವಾಮಿ, ಶ್ರೀ ಶಿರಡಿ ಸಾಯಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ, ಬೋರಣ್ಣ ಮತ್ತು ಇನ್ನು ಅನೇಕ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ದೇವರಹಟ್ಟಿ ನಾಗರಾಜ (ಕಸಬಾ ಹೋಬಳಿ ) ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB