ಕಾರವಾರ: ಜನಗಣತಿ ಕಾರ್ಯವು ರಾಷ್ಟ್ರದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷೀಪ್ರಿಯಾ ನಿರ್ದೇಶನ ನೀಡಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾ ಚಾರ್ಜ್ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಗ್ರಾಮ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ಯಾವುದೇ ಯೋಜನೆಗಳನ್ನು ರೂಪಿಸಲು ಜನಗಣತಿಯ ಮಾಹಿತಿಯು ಅತ್ಯಂತ ಪ್ರಮುಖವಾಗಿದ್ದು, ಜನಗಣತಿಯ ಆಧಾರದಲ್ಲಿಯೇ ಸರ್ಕಾರಗಳು ಆಯವ್ಯಯ ಸಿದ್ದಪಡಿಸಲು, ವಸತಿ, ಮೂಲಸೌಕರ್ಯ ಸೇರಿದಂತೆ ಸಾರ್ವಜನಿಕ ಸೇವೆಗಳಿಗಾಗಿ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲು ಈ ಅಂಕಿ ಅಂಶಗಳ ಬಳಕೆಯಾಗುವ ಕಾರಣ ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ಸ್ಪಷ್ಟವಾದ ಮಾಹಿತಿಗಳನ್ನು ಜನಗಣತಿ ವೇಳೆಯಲ್ಲಿ ನಮೂದಿಸುವಂತೆ ತಿಳಿಸಿದರು.
ಈ ಬಾರಿಯ ಜನಗಣತಿಯು ಸ್ವಾತಂತ್ರ್ಯಾನಂತರ ನಡೆಯುತ್ತಿರುವ 8 ನೇ ಜನಗಣತಿಯಾಗಿದ್ದು, ಡಿಜಿಟಲ್ ಮೋಡ್ ನಲ್ಲಿ ನಡೆಯುತ್ತಿರುವ ಮೊದಲ ಗಣತಿಯಾಗಿದೆ. ಸ್ಮಾರ್ಟ್ ಪೋನ್ ಗಳ ಮೂಲಕ ನಡೆಯುವ ಈ ಜನಗಣತಿಗೆ ಪ್ರತ್ಯೇಕ ಆಪ್ ರಚಿಸಲಾಗಿದ್ದು, ಆಪ್ ನಲ್ಲಿಯೇ ಪ್ರತೀ ಮನೆಯ ಸುಮಾರು 30 ಪ್ರಶ್ನೆಗಳಿಗೆ ಉತ್ತರಗಳನ್ನು ದಾಖಲಿಸಬೇಕಾಗುತ್ತದೆ. ಜನಗಣತಿಯು 2 ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಏಪ್ರಿಲ್ 1 ರಿಂದ 15 ರ ವರೆಗೆ ಸ್ವಯಂ ಗಣತಿಗೆ ಅವಕಾಶ ನೀಡಿದ್ದು, ಏಪ್ರಿಲ್ 16 ರಿಂದ ಮೇ 16 ರ ವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಜೋಯಿಡಾ ತಾಲೂಕಿನಲ್ಲಿ ಪ್ರಾಯೋಗಿಕವಾಗಿ, ಡಿಜಿಟಲ್ ಮೋಡ್ ನಲ್ಲಿ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲವಾಗಿದ್ದು, ಜನಗಣತಿ ಕಾರ್ಯಕ್ಕೆ ನಿಯೋಜಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿಗಧಿತ ಅವಧಿಯೊಳಗೆ ಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಮಾತನಾಡಿ, ದೇಶದ ಜನಗಣತಿ ಕಾರ್ಯದಲ್ಲಿ ಭಾಗವಹಿಸುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ದೊರೆತ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಂಡು ತಮ್ಮ ಅಧೀನದ ಸಿಬ್ಬಂದಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡುವಂತೆ ತಿಳಿಸಿದರು.
ಜನಗಣತಿ ನಿರ್ದೇಶನಾಲಯ, ಬೆಂಗಳೂರಿನ ಜಂಟಿ ನಿರ್ದೇಶಕ ಶಕ್ತಿ ಕುಮಾರ್ ಮಾತನಾಡಿ, ಜನಗಣತಿಯು ದೇಶದ ಅತಿದೊಡ್ಡ ಸಾರ್ವಜನಿಕ ಅಭ್ಯಾಸ ಚಟುವಟಿಕೆಯಾಗಿದ್ದು, ಕೋವಿಡ್ ಕಾರಣದಿಂದ ಜನಗಣತಿ ಕಾರ್ಯಕ್ಕೆ ವಿಳಂಬವಾಗಿದ್ದು, ಪ್ರಸ್ತುತ ನಡೆಯುವ ಗಣತಿಯು ಸಂಪೂರ್ಣ ಆನ್ಲೈನ್ ಮೋಡ್ ನಲ್ಲಿರುವುದದರಿಂದ ತಿದ್ದಪಡಿಗಳನ್ನು ಮಾಡಲು ಅವಕಶವಿಲ್ಲ ಆದ್ದರಿಂದ ಗಣತಿದಾರರು ಅತ್ಯಂತ ಎಚ್ಚರಿಕೆಯಿಂದ ದಾಖಲೆಗಳನ್ನು ನಮೂದಿಸಬೇಕು. ದೇಶದಲ್ಲಿ ಅತ್ಯಂತ ತಳಮಟ್ಟದಿಂದ ಮಾಹಿತಿ ಸಂಗ್ರಹಿಸುವ ಏಕೈಕ ಕಾರ್ಯಕ್ರಮ ಇದಾಗಿದ್ದು, ಮುಂದಿನ 10 ವರ್ಷಗಳ ಕಾಲ ದೇಶದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಈ ದಾಖಲೆ ಬಳಕೆಯಾಗಲಿದ್ದು, ಗಣತಿ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬರೂ ಅತ್ಯಂತ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಸ್ವಾಗತಿಸಿದರು. ಜಿಲ್ಲೆಯ ನೋಡೆಲ್ ಅಧಿಕಾರಿ ರಾಮ್ ಕುಮಾರ್, ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ತಹಶೀಲ್ದಾರ್ಗಳು ಮತ್ತಿತರರು ತರಬೇತಿಯಲ್ಲಿ ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


