ಕೊರಟಗೆರೆ: ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿ ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸದಂತೆ ರಾಜ್ಯ ರೈತ ಸಂಘ (ಪುಟ್ಟಣ್ಣ ನವರ ಬಣದಿಂದ) ಕೊರಟಗೆರೆ ತಹಶೀಲ್ದಾರ್ ಮುಖೇನ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು.
ವಿದ್ಯುತ್ ಕ್ಷೇತ್ರದ ಖಾಸಗಿಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ರಂಗಹನುಮಯ್ಯ, ಕೃಷಿ ಪಂಪ್ಸೆಟ್ಟುಗಳಿಗೆ ಮೀಟರ್ ಅಳವಡಿಸುವ ಹುನ್ನಾರದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದೆ ಸರಿಯಾಬೇಕು.
ಅಕ್ರಮ ಸಕ್ರಮ ಯೋಜನೆ ಅಡಿಯಲ್ಲಿ ನೋಂದಣಿಯಾಗಿರುವ ಎಲ್ಲಾ ಪ್ರಕರಣಗಳಲ್ಲಿ ಟ್ರಾನ್ಸ್ ಫಾರಂನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಹಾಗೂ ಬಾಕಿ ಎಲ್ಲಾ ವಿದ್ಯುತ್ ಬಿಲ್ಲುಗಳನ್ನು ಮನ್ನಾ ಮಾಡಬೇಕು. ಕೇಂದ್ರ ಸರ್ಕಾರ ಅಡಿಕೆ ಆಮದಿನ ಮೇಲೆ ಹೆಚ್ಚು ಸುಂಕ ವಿಧಿಸಿ, ಭೂತಾನ್ ಸೇರಿದಂತೆ ಬೇರೆ ಬೇರೆ ರಾಷ್ಟಗಳಿಂದ ಆಮದು ಮಾಡಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ತಿಳಿಸಿದರು.
ನಂತರ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಪಾಷಾ ಮಾತನಾಡಿ ಕೇಂದ್ರ ಸರ್ಕಾರ ಮಾತು ಕೊಟ್ಟಂತೆ ರೈತರ ಎಲ್ಲ ಕೃಷಿ ಉತ್ಪನ್ನಗಳನ್ನು ಎಂ.ಎಸ್.ಪಿ. ದರದಲ್ಲಿ ಖರೀದಿಸಲು ವರ್ಷ ಪೂರ್ತಿ ಖರೀದಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಂ.ಎಸ್.ಪಿಯನ್ನು ಕಾನೂನಾತ್ಮಕವಾಗಿ ಜಾರಿಗೊಳಿಸಬೇಕು. ಹವಾಮಾನ ವೈಪರೀತ್ಯದಿಂದ ನಷ್ಟವಾಗಿರುವ ಬೆಳೆಗಳಿಗೆ ವಾಸ್ತವ ವೆಚ್ಚ ಆಧರಿಸಿ ಸೂಕ್ತ ಬೆಳೆ ನಷ್ಟ ಪರಿಹಾರ ನೀಡಬೇಕು ಮತ್ತು ಸಂಪೂರ್ಣವಾಗಿ ಬೆಳೆ ನಷ್ಟವಾಗಿರುವುದರಿಂದ ಎಲ್ಲ ರೈತರಿಗೂ ಕೂಡಲೇ ಬೆಳೆ ವಿಮೆ ಪಾವತಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ರಂಗಹನುಮಯ್ಯ,ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಪಾಷಾ, ಗೌರವಾಧ್ಯಕ್ಷ ನರಸಿಂಹಮೂರ್ತಿ, ಸಂಘಟನಾ ಕಾರ್ಯದರ್ಶಿ ದೇವರಾಜು, ಉಪಾಧ್ಯಕ್ಷ ರಂಗಹನುಮಯ್ಯ ಸೇರಿದಂತೆ ರೈತ ಮುಖಂಡರು ಹಾಜರಿದ್ದರು.
ವರದಿ: ಮಂಜುಸ್ವಾಮಿ. ಎಂ. ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy