ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ.
ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಎಂಬ ಇಬ್ಬರು ಆರೋಪಿಗಳು ಬಂಧಿತ ಆರೋಪಿಗಳಾಗಿದ್ದಾರೆ.
ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಲೇಔಟ್ ನ ನಿಶ್ಚಿತ್(13) ಮತ್ತು ಆತನ ಪೋಷಕರು ವಾಸವಾಗಿದ್ದರು. ನಗರದ ಪ್ರತಿಷ್ಠಿತ ಕಾಲೇಜ್ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ನಿಶ್ಚಿತ್ ತಂದೆಯ ಬಳಿ ಆರೋಪಿ ಗುರುಮೂರ್ತಿ ಹೆಚ್ಚುವರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಆಗಾಗ ಮನೆಗೆ ಹೋಗಿ ಬರುತ್ತಿದ್ದ ಗುರುಮೂರ್ತಿ, ನಿಶ್ಚಿತ್ ನನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಡುವ ಸಂಚು ರೂಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬುಧವಾರ ಸಂಜೆ ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಯತ್ತ ಬರುತ್ತಿದ್ದ ನಿಶ್ಚಿತ್ ನನ್ನು ಆರೋಪಿಗಳು ಅಪಹರಿಸಿದ್ದರು. ಟ್ಯೂಷನ್ ಮುಗಿದು ಸುಮಾರು ಗಂಟೆಗಳಾದರೂ ಮನೆಗೆ ಬಾರದ ಮಗನ ಬಗ್ಗೆ ಪೋಷಕರು ಆಂತಕದಿಂದ ಹುಡುಕಾಟ ನಡೆಸಿದ್ದರು. ಬಳಿಕ ಹುಳಿಮಾವು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಅಷ್ಟೊತ್ತಿಗಾಗಲೇ ಬಾಲಕನ ತಂದೆಗೆ ಕರೆ ಮಾಡಿದ್ದ ಆರೋಪಿಗಳು 5 ಲಕ್ಷ ರೂ ನೀಡುವಂತೆ ಡಿಮ್ಯಾಂಡ್ ಮಾಡಿದ್ದರು. ಹಣ ನೀಡುವುದಾಗಿ ಪೋಷಕರೂ ಸಹ ಒಪ್ಪಿಕೊಂಡಿದ್ದರು. ಇತ್ತ ವಿಷಯ ತಿಳಿದ ಪೊಲೀಸರು ಅಪಹರಣಕಾರರ ಪೋನ್ ಕರೆ ಆಧರಿಸಿ ತನಿಖೆ ಆರಂಭಿಸಿದ್ದರು. ಆದರೆ ಅಷ್ಟರಲ್ಲಾಗಲೇ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಕತ್ತು ಕೊಯ್ದು, ಸುಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.
ಗುರುವಾರ ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಮಾರಕಾಸ್ತ್ರಗಳನ್ನು ಬಳಸಿ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಮುಂದಾದಾಗ, ಇನ್ಸ್ಪೆಕ್ಟರ್ ಕುಮಾರಸ್ವಾಮಿ ಹಾಗೂ ಪಿಎಸ್ ಐ ಅರವಿಂದ್ ಕುಮಾರ್ ಆರೋಪಿಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


