ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ಕೊರಟಗೆರೆ: ಕುಡಿಯಲು ಶುದ್ಧ ನೀರಿಲ್ಲದೇ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸಲುಕುಂಟೆ ಗ್ರಾಮಸ್ಥರು ಕಂಗಾಲಾಗಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುರಂಕೋಟೆ ಗ್ರಾಮ ಪಂಚಾಯಿತಿ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ವಿಫಲವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು 5 ತಿಂಗಳಾದರೂ ಇನ್ನೂ ಅದನ್ನು ಸರಿಪಡಿಸುವ ಗೋಜಿಗೆ ಅಧಿಕಾರಿಗಳು ಹೋಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮಾಡುವಲ್ಲಿ ಅಭಿವೃದ್ಧಿ ಅಧಿಕಾರಿಗಳು ವಿಫಲವಾದ ಪರಿಣಾಮ ಐದು ತಿಂಗಳಿಂದ ದಾಸಲುಕುಂಟೆ ಗ್ರಾಮದ ಜನರು ಶುದ್ಧ ಕುಡಿಯುವ ನೀರಿಲ್ಲದೆ ಪರದಾಟ ನಡೆಸುತ್ತಿದ್ದಾರೆ.
ಪಕ್ಕದ ಊರಿನಿಂದ ಕುಡಿಯುವ ನೀರನ್ನು ತರುವ ಪರಿಸ್ಥಿತಿ ಸದ್ಯ ನಿರ್ಮಾಣವಾಗಿದೆ. ಕಳೆದ ಒಂದು ವರ್ಷದಿಂದ ಇಲ್ಲಿಗೆ ವಾಟರ್ ಮ್ಯಾನ್ ಕೂಡ ಇಲ್ಲ, ಗ್ರಾಮದಲ್ಲಿ ಜಲ ಜೀವನ್ ಯೋಜನೆ ಅನುಷ್ಠಾನ ಮಾಡುವಲ್ಲಿ ಸ್ಥಳೀಯ ಪ್ರಾಧಿಕಾರ ವಿಫಲವಾಗಿದೆ.
ಜಲ ಜೀವನ್ ಯೋಜನೆಯ ಕಾಮಗಾರಿಯು ಮೂಲೆಗೆ ಬಿದ್ದಿದೆ ಟೆಂಡರ್ ಆಗಿದ್ದರು ಗುತ್ತಿಗೆದಾರ ಬಂದು ಕೆಲಸ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಸಮಸ್ಯೆ ಬಗೆಹರಿಸಲು ಪ್ರಯತ್ನ: ತಾ.ಪಂ. ಇಓ
ದಾಸಲುಕುಂಟೆ ಗ್ರಾಮದ ಸಮಸ್ಯೆಯನ್ನ ಪರಿಶೀಲಿಸಿ ಶೀಘ್ರವೇ ಬಗೆಹರಿಸುವ ಪ್ರಯತ್ನ ಮಾಡುತ್ತೇವೆ. ಈಗಾಗಲೇ ಕುರಂಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕದ ರಿಪೇರಿ ಮಾಡಿಸಿ ಗ್ರಾಮಸ್ಥರಿಗೆ ನೀರನ್ನು ಪೂರೈಕೆ ಮಾಡುತ್ತೇವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296