ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ, ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ್ದರಿಂದ ಬೇಸರಗೊಂಡ ಅಭಿಮಾನಿಗಳು ಕೈಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರಗಳನ್ನು ಹಿಡಿದು ಹಿರೇಬಾಗೇವಾಡಿ ಟೋಲ್ ಬಳಿ ಧರಣಿ ಕುಳಿತರು. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.
ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ತೆರವುಗೊಳಿಸಿದರು. ಬಳಿಕ ಪ್ರತಿಭಟನಾಕಾರರು ಹಿರೇಬಾಗೇವಾಡಿ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಧರಣಿ ಮುಂದುವರಿಸಿದರು.
ಬೆಳಗಾವಿ ಮಾತ್ರವಲ್ಲದೆ ಬೆಂಗಳೂರಿನ ಚಾಲುಕ್ಯ ವೃತ್ತದಲ್ಲೂ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಪ್ರತಿಭಟನೆ ನಡೆಸಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.
ಕಾಂಗ್ರೆಸ್ ನಾಯಕರ ಆಗ್ರಹ: ಹಿರೇಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ. ಪಾಟೀಲ ಮಾತನಾಡಿ, “ಕಳೆದ ಮೂರು ವರ್ಷಗಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಯಶಸ್ವಿಯಾಗಿ ನಿಭಾಯಿಸಿ ‘ಗೃಹಲಕ್ಷ್ಮಿ’ ಯೋಜನೆಯನ್ನು ಮನೆಮನೆಗೆ ತಲುಪಿಸಿದ ನಾಯಕಿಗೆ ಸಚಿವ ಸ್ಥಾನ ನೀಡದಿರುವುದು ಅನ್ಯಾಯ. ತಕ್ಷಣವೇ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.
ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹಂಗಾಮಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದ್ದು, ಅವರ ಬೆಂಬಲಿಗರು ಶಾಸಕರ ಭವನದ ಬಳಿ ಪ್ರತಿಭಟನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
