ಪಾವಗಡ: ತಾಲ್ಲೂಕಿನಲ್ಲಿ ದೊಡ್ಡಮಟ್ಟದಲ್ಲಿ ಭೂಮಾಫಿಯಾ ದಂಧೆ ನಡೆಯುತ್ತಿದೆ ಎಂದು ಶ್ರೀ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಗೌಡೆಟಿ ಪ್ರಭಾಕರ್ ಗಂಭೀರ ಆರೋಪ ಮಾಡಿದರು. ಅವರು ಪಟ್ಟಣದ ಅಗ್ರಿಗೋಲ್ಡ್ ಲೇಔಟ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ತಹಶೀಲ್ದಾರ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಯಾರದೋ ಜಮೀನು, ಯಾರಿಗೋ ಖಾತೆ ವರ್ಗಾವಣೆ ಮಾಡುತ್ತಿದ್ದಾರೆ ಎಂದು ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತದ ಕಾರ್ಯವೈಖರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಸಬಾ ಹೋಬಳಿಯ ಕನಕಾಪುರ ಗ್ರಾಮದ ಸರ್ವೆ ನಂಬರ್ 152 ರಲ್ಲಿನ ಜಮೀನಿನ ವಿಷಯದಲ್ಲಿ ಕಂದಾಯ ಅಧಿಕಾರಿಗಳು ಬ್ರಹ್ಮಾಂಡ ಭ್ರಷ್ಟಾಚಾರ ಎಸಗಿದ್ದಾರೆ. ಕರ್ನಾಟಕದ ಭೂಮಿಗೆ ಸಂಬಂಧಿಸಿದಂತೆ ಸ್ಥಳೀಯ ದಾಖಲೆಗಳನ್ನು ಪರಿಶೀಲಿಸುವ ಬದಲು, ಆಂಧ್ರಪ್ರದೇಶದ ವಂಶವೃಕ್ಷವನ್ನು ಆಧಾರವಾಗಿಟ್ಟುಕೊಂಡು ಅಕ್ರಮವಾಗಿ ಬೇರೆಯವರ ಹೆಸರಿಗೆ ಖಾತೆ ಮಾಡಿಕೊಡಲಾಗಿದೆ. ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ತಹಶೀಲ್ದಾರ್ ಅವರು ನಿಯಮಗಳನ್ನು ಗಾಳಿಗೆ ತೂರಿ ಈ ಕೆಲಸ ಮಾಡಿದ್ದಾರೆ. ಅಧಿಕಾರಿಗಳಿಗೆ ಹಣ ಕೊಟ್ಟರೆ ಸಾಕು, ಏನು ಬೇಕಾದರೂ ಮಾಡುತ್ತಾರೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದರು.
ಜಮೀನು ಖಾತೆ ಬದಲಾವಣೆ ಮಾಡಬೇಕಾದರೆ ಅಧಿಕಾರಿಗಳು ಸರ್ಕಾರದ ನಿಯಮಾವಳಿಗಳ ಅನುಸಾರವಾಗಿ ಮಾಡಬೇಕಾಗಿದೆ. ಇವೆಲ್ಲವನ್ನು ಗಾಳಿಗೆ ತೂರಿದ ಅಧಿಕಾರಿಗಳು ಯಾರದೋ ವಂಶವೃಕ್ಷ ಯಾರಿಗೋ ಖಾತೆ ಎಂಬಂತೆ ಮಾಡುತ್ತಿದ್ದಾರೆ. ಇಂಥ ವ್ಯವಸ್ಥೆ ಇಲ್ಲಿದ್ದು, ತಾಲೂಕಿನಲ್ಲಿ ಕಾನೂನು ವ್ಯವಸ್ಥೆ ಕೆಟ್ಟು ನಿಂತಿದೆ. ಇದನ್ನು ತಕ್ಷಣವೇ ತನಿಖೆ ಕೈಗೊಂಡು ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಹಗರಣ ಕುರಿತು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ನಮ್ಮ ದೂರಿನ ಮೇರೆಗೆ ಜಿಲ್ಲಾಧಿಕಾರಿಗಳು ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿಗಳಿಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ. ಆದರೆ, ಉಪವಿಭಾಗಾಧಿಕಾರಿಗಳು ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿದ್ದಾರೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಸಹ ಕೇವಲ ಪತ್ರ ವ್ಯವಹಾರಕ್ಕೆ ಸೀಮಿತವಾಗಿರುವುದು ಅವರ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದರು.
ಕೂಡಲೇ ಅಕ್ರಮವಾಗಿ ಮಾಡಲಾಗಿರುವ ಖಾತೆಯನ್ನು ರದ್ದುಗೊಳಿಸಬೇಕು ಮತ್ತು ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ತಾಲ್ಲೂಕು ಆಡಳಿತ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಧರ್ಮಪಾಲ್, ಮಾದಿಗ ದಂಡೋರ ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ, ಹನುಮಂತರಾಯಪ್ಪ, ರವಿ, ನರಸಿಂಹಮೂರ್ತಿ, ನರಸಿಂಹ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


