ತುಮಕೂರು: ದೇಶದ ಭವಿಷ್ಯವಾಗಿರುವ ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕರೆ ನೀಡಿದರು.
ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ನಶಾ ಮುಕ್ತ ಭಾರತ’ ಹಾಗೂ ‘ಯುವ ಶುದ್ಧ ಅಭಿಯಾನ ವಾಕಥಾನ್’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ‘ನಶಾ ಮುಕ್ತ ಕ್ಯಾಂಪಸ್’, ‘ಆತ್ಮಹತ್ಯೆ ಮುಕ್ತ ಕ್ಯಾಂಪಸ್’ ಹಾಗೂ ‘ಅಂಗಾಂಗ ದಾನ ಅಭಿಯಾನ’ಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
ವ್ಯಸನ ಮುಕ್ತ ಕ್ಯಾಂಪಸ್: ಕಾಲೇಜು ಕ್ಯಾಂಪಸ್ ಗಳಲ್ಲಿ ಕಲಿಯುತ್ತಿರುವ ಯುವಕರು ನಶಾ ಪದಾರ್ಥಗಳಿಂದ ಸಂಪೂರ್ಣವಾಗಿ ಮುಕ್ತರಾಗಬೇಕು. ಮಾದಕ ವ್ಯಸನವು ಕೇವಲ ವ್ಯಕ್ತಿಯನ್ನಲ್ಲದೆ, ಅವರ ಕುಟುಂಬ ಹಾಗೂ ಇಡೀ ದೇಶದ ಭವಿಷ್ಯವನ್ನೇ ನಾಶಪಡಿಸುತ್ತದೆ ಎಂದು ಸಚಿವರು ಎಚ್ಚರಿಸಿದರು.
ಯುವಜನತೆ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಪ್ರತಿನಿತ್ಯ ಯೋಗ, ಪ್ರಾಣಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಮೂಲಕ ಆತ್ಮಹತ್ಯೆ ಮುಕ್ತ ಮತ್ತು ಆರೋಗ್ಯಕರ ಶೈಕ್ಷಣಿಕ ವಾತಾವರಣ ನಿರ್ಮಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಪರಮಪೂಜ್ಯ ಶ್ರೀ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶಾಸಕರಾದ ಜ್ಯೋತಿ ಗಣೇಶ್, ಡಾ. ಹೆಚ್.ಡಿ. ರಂಗನಾಥ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ಸೇರಿದಂತೆ ಜಿಲ್ಲೆಯ ಪ್ರಮುಖ ಮುಖಂಡರು ಹಾಗೂ ಸಾವಿರಾರು ವಿದ್ಯಾರ್ಥಿಗಳು ಈ ಬೃಹತ್ ವಾಕಥಾನ್ ನಲ್ಲಿ ಪಾಲ್ಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


